ಬೆಂಗಳೂರು: ಸಚಿವ ಸಂಪುಟಕ್ಕೆ ಸೇರಲು ತುದಿಗಾಲಲ್ಲಿ ನಿಂತಿದ್ದ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.
‘ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ ಬಳಿಕ, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದರು. ಹೀಗಾಗಿ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಉತ್ಸಾಹ ಇಮ್ಮಡಿಸಿತ್ತು.
ಆದರೆ, ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಖ್ಯಮಂತ್ರಿಗೆ ಸಾಧ್ಯವಾಗಿಲ್ಲ. ಮೇ 13ಕ್ಕೆ ಸರ್ಕಾರ ನಾಲ್ಕು ವರ್ಷ ಪೂರ್ಣಗೊಳಿಸಲಿದೆ. ಈ ಸಂದರ್ಭದಲ್ಲಿ ಸರ್ಕಾರದ ಸಾಧನೆಯನ್ನು ಜನರಿಗೆ ಪರಿಚಯಿಸುವ ವಿಶೇಷ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಿದ್ಧತೆ ನಡೆದಿದೆ. ಅದು ಮುಗಿದ ಬಳಿಕವೇ ಸಂಪುಟ ವಿಸ್ತರಣೆಗೆ ಮತ್ತೆ ಚಾಲನೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಸಿದ್ದರಾಮಯ್ಯ ನಾಲ್ಕು ದಿನಗಳ ಕಾಲ ದುಬೈ ಪ್ರವಾಸಕ್ಕೆ ತೆರಳಲಿದ್ದಾರೆ. ಹೀಗಾಗಿ ಮೇ 13 ರೊಳಗೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ಸಾಧ್ಯವಾಗದೇ ಇರುವುದರಿಂದ ಅಲ್ಲಿಯವರೆಗೆ ಸಂಪುಟ ವಿಸ್ತರಣೆ ನನೆಗುದಿಗೆ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.