ಚನ್ನಪಟ್ಟಣ: ಪಟ್ಟಣದ ಶೇರು ಹೋಟೆಲ್ ಬಳಿಯ ಪೇಟೆಚೇರಿಯಲ್ಲಿ ಬುಧವಾರ ಕಲುಷಿತ ನೀರು ಸೇವಿಸಿ 45ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೇಟೆಚೇರಿ ನಿವಾಸಿಗಳಿಗೆ ಇದ್ದಕ್ಕಿದ್ದಂತೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಪ್ರಾರಂಭದಲ್ಲಿ ಕೆಲವರಿಗೆ ಕಾಣಿಸಿಕೊಂಡ ಇದು ನಂತರ ಹೆಚ್ಚಾಗುತ್ತಾ ಹೋಗಿದೆ. ಕೆಲವರು ಸ್ಥಳದಲ್ಲೇ ಅಸ್ವಸ್ಥರಾಗಿದ್ದಾರೆ. ಈ ವಿಷಯ ತಿಳಿದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡಿದೆ. ಆದರೂ ಕೆಲವರು ಭೀತಿಗೊಂಡು ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ.
ಕುಡಿಯುವ ನೀರಿನಲ್ಲಿ ವ್ಯತ್ಯಯ ಉಂಟಾಗಿ ಈ ರೀತಿಯಾಗಿರಬಹುದು ಎಂದು ಶಂಕಿಸಲಾಗಿದ್ದು, ನೀರಿನ ಪೈಪು ಒಡೆದುಹೋಗಿ ಕಲುಷಿತ ನೀರು ಕುಡಿಯುವ ನೀರಿನ ಜೊತೆ ಮಿಶ್ರಣವಾಗಿರುವ ಕಾರಣ ಈಗಾಗಿದೆ. ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪೇಟೆಚೇರಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸುತ್ತಿಲ್ಲ. ಚರಂಡಿಗಳು ತುಂಬಿಹರಿಯುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಬರುವ ಭೀತಿ ಎದುರಾಗಿದೆ ಎಂದು ಇಲ್ಲಿನ ನಿವಾಸಿ ಶಿವಣ್ಣ ಆರೋಪಿಸಿದ್ದಾರೆ.
ನಗರಸಭೆ ಚರಂಡಿಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಮುಂದಾಗಬೇಕು. ನೀರು ಸರಬರಾಜು ಮಂಡಳಿಯವರು ಸ್ವಚ್ಛ ನೀರು ಪೂರೈಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.