ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಭರ್ತಿ ಮಾಡಲು 3,085 ಹುದ್ದೆಗಳನ್ನು ಹೊಸದಾಗಿ ಸೃಷ್ಟಿಸಿದ್ದು ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಬುಧವಾರ ಜೆಡಿಎಸ್ನ ಕೆ.ಟಿ.ಶ್ರೀಕಂಠೇಗೌಡ ಪ್ರಶ್ನೆಗೆ ಅರಣ್ಯ ಸಚಿವ ಬಿ.ರಮಾನಾಥ ರೈ ಪರವಾಗಿ ಅವರು ಈ ಉತ್ತರ ನೀಡಿದರು.
ಪಶ್ಚಿಮಘಟ್ಟದ ಅರಣ್ಯ ಉಳಿಸಲು ಖಾಲಿ ಇರುವ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡಲೇಬೇಕಾದ ಜವಾಬ್ದಾರಿ ಇದೆ. ಖಾಲಿ ಇರುವ 143 ಉಪ ವಲಯ ಅರಣ್ಯಾಧಿಕಾರಿ ಮತ್ತು 119 ಅರಣ್ಯ ರಕ್ಷಕ ಸೇರಿ ಒಟ್ಟು 262 ಹುದ್ದೆಗಳನ್ನು ಈ ವರ್ಷವೇ ಭರ್ತಿ ಮಾಡಲು ಸರ್ಕಾರ ಅನುಮತಿ ಕೊಟ್ಟಿದೆ. ಇದರಲ್ಲಿ ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಿಗೆ ಆದ್ಯತೆ ಮೇಲೆ ಹುದ್ದೆ ಭರ್ತಿ ಮಾಡಲಾಗುವುದು ಎಂದರು.
ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ 20 ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ 20 ಅರಣ್ಯ ವೀಕ್ಷಕ ಹುದ್ದೆಗಳನ್ನು ಸದ್ಯದಲ್ಲೇ ನೇರ ನೇಮಕ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.