ಬೆಂಗಳೂರು: ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಸೆ. 15ರ ಬಳಿಕ ನಡೆಯುವ ಸಾಧ್ಯತೆ ಇದೆ.
ಸ್ಥಳೀಯ ಸಂಸ್ಥೆ ಚುನಾವಣಾ ಪ್ರಕ್ರಿಯೆ ಮತ್ತು ಪ್ರವಾಹಪೀಡಿತ ಕೊಡಗು ಜಿಲ್ಲೆಯಲ್ಲಿ ಪರಿಹಾರ ಕಾರ್ಯಗಳು ತಹಬದಿಗೆ ಬಂದ ಬಳಿಕ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಇದೇ 30 ಅಥವಾ 31ರಂದು ಸಭೆ ನಡೆಸಲು ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಿಗಮ – ಮಂಡಳಿಗಳಿಗೆ ನೇಮಕ ಮತ್ತು ಸಂಪುಟ ವಿಸ್ತರಣೆ ವಿಷಯ ಸಭೆಯಲ್ಲಿ ಚರ್ಚೆಗೆ ಬರಲಿದೆ. ಬಳಿಕ ಮುಂದಿನ ಹೆಜ್ಜೆ ಇಡಲು ಉಭಯ ಪಕ್ಷಗಳು ತೀರ್ಮಾನಿಸಿವೆ ಎಂದು ಗೊತ್ತಾಗಿದೆ.
ಈ ಮಧ್ಯೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಹುಟ್ಟುಹಬ್ಬಕ್ಕೆ ಶುಭ ಕೋರುವ ನೆಪದಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಗುರುವಾರ ಮಧ್ಯಾಹ್ನ ದಿಢೀರ್ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪರಮೇಶ್ವರ, ‘ಸಮನ್ವಯ ಸಮಿತಿಯಲ್ಲಿ ಪಕ್ಷದ ಅಧ್ಯಕ್ಷರು ಸದಸ್ಯರಾಗುವುದು ಸಹಜ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗಲೇ ಸಮನ್ವಯ ಸಮಿತಿ ಸದಸ್ಯನಾಗಿದ್ದೆ. ಈಗ ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರನ್ನು ಸಮಿತಿಗೆ ಸೇರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ’ ಎಂದರು.
ಆದರೆ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
‘ಸಚಿವ ಸಂಪುಟ ವಿಸ್ತರಣೆ ಆಗುವ ಸಮಯಕ್ಕೆ ಆಗಲಿದೆ. ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಸದ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಗಮನಹರಿಸಿದ್ದೇವೆ. ಈ ವಿಷಯದ ಕುರಿತು ಚರ್ಚಿಸಲು ಪರಮೇಶ್ವರ ದೆಹಲಿಗೆ ತೆರಳಿದ್ದಾರೆ’ ಎಂದು ಜಲಸಂಪನ್ಮೂಲ ಸಚಿವ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.