ನವದೆಹಲಿ/ಹೇಗ್ (ಪಿಟಿಐ): ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ವಿಧಿಸಿರುವ ಮರಣ ದಂಡನೆ ಪ್ರಶ್ನಿಸಿ ಭಾರತ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಗುರುವಾರ ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ.
ಶಿಕ್ಷೆಯನ್ನು ತಕ್ಷಣ ಅಮಾನತು ಮಾಡಬೇಕು ಎಂದು ಭಾರತ ಕೋರಿದ ಹತ್ತೇ ದಿನಗಳಲ್ಲಿ ಐಸಿಜೆ ತೀರ್ಪು ನೀಡಲಿದೆ. 16 ಬಾರಿ ಮನವಿ ಸಲ್ಲಿಸಿದ್ದರೂ ಜಾಧವ್ ಅವರಿಗೆ ಕಾನ್ಸಲ್ ಸಂಪರ್ಕಕ್ಕೆ ಅವಕಾಶ ನೀಡಿಲ್ಲ. ಇದು ವಿಯೆನ್ನಾ ಒಪ್ಪಂದದ ಉಲ್ಲಂಘನೆ ಎಂದು ಭಾರತ ವಾದಿಸಿತ್ತು.
ಈ ಪ್ರಕರಣದ ತೀರ್ಪನ್ನು ನೆದರ್ಲೆಂಡ್ನ ಹೇಗ್ನಲ್ಲಿರುವ ಅಂತರರಾಷ್ಟ್ರೀಯ ನ್ಯಾಯಾಲಯವು ಪ್ರಕಟಿಸಲಿದೆ. ಈ ಪ್ರಕರಣದಲ್ಲಿ ಭಾರತ ಮತ್ತು ಪಾಕಿಸ್ತಾನ ಪರ ವಕೀಲರು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಸೋಮವಾರ (ಮೇ 15) ವಾದ ಮಂಡಿಸಿದ್ದರು.
‘ಜಾದವ್ ಅವರನ್ನು ಇರಾನ್ನಿಂದ ಅಪಹರಿಸಿರುವ ಪಾಕಿಸ್ತಾನ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಸೇನಾ ನ್ಯಾಯಾಲಯದ ಈ ತೀರ್ಪು ವಿಯೆನ್ನಾ ಒಪ್ಪಂದ ಹಾಗೂ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿ’ ಎಂದು ಭಾರತ ಪರ ವಕೀಲ ಹರೀಶ್ ಸಾಳ್ವೆ ಅವರು ವಾದಿಸಿದ್ದರು.
ಪಾಕಿಸ್ತಾನದ ಪರ ವಾದ ಮಂಡಿಸಿದ್ದ ಕ್ಯೂ.ಸಿ. ಖಾವರ್ ಖುರೇಶಿ, ‘ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸುವ ಅಗತ್ಯವೇ ಇರಲಿಲ್ಲ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರಕರಣ. ರಾಷ್ಟ್ರೀಯ ಭದ್ರತೆ ವಿಚಾರವನ್ನು ಅಂತರರಾಷ್ಟ್ರೀಯ ನ್ಯಾಯಾಲಯ ತೀರ್ಮಾನಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದರು.
‘ಜಾದವ್ ಅಪರಾಧಿ ಎಂಬುದನ್ನು ಸಾಬೀತುಪಡಿಸಲು ಪಾಕಿಸ್ತಾನದ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಜಾದವ್ ತಪ್ಪೊಪ್ಪಿಗೆ ವಿಡಿಯೊ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯ’ ಎಂದು ಖುರೇಶಿ ವಾದಿಸಿದ್ದರು.
ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆಯ ಮಾಹಿತಿಯನ್ನು ಭಾರತದೊಂದಿಗೆ ಹಂಚಿಕೊಂಡಿದ್ದಾಗಿ ಪಾಕಿಸ್ತಾನವು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.