ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸೆರೆಯಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಡಿ.25ರಂದು ಭೇಟಿ ಮಾಡಲು ಅವರ ತಾಯಿ ಹಾಗೂ ಪತ್ನಿಗೆ ಪಾಕಿಸ್ತಾನ ಸರ್ಕಾರ ಅವಕಾಶ ನೀಡಿದೆ.
ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ, ಪಾಕಿಸ್ತಾನದಲ್ಲಿ ಸೆರೆಯಲ್ಲಿರುವ ಕುಲಭೂಷಣ್ ಜಾಧವ್ ಅವರಿಗೆ ಏಪ್ರಿಲ್ನಲ್ಲಿ ಇಲ್ಲಿನ ಸೇನಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮೇನಲ್ಲಿ ಭಾರತದ ಮೇಲ್ಮನವಿಯ ಮೇರೆಗೆ ಅಂತರರಾಷ್ಟ್ರೀಯ ನ್ಯಾಯಾಲಯ ಮರಣದಂಡನೆಗೆ ತಡೆಯಾಜ್ಞೆ ನೀಡಿದೆ.
‘ಭಾರತದ ಗುಪ್ತಚರ ಸಂಸ್ಥೆ ‘ರಾ’ ಪರವಾಗಿ ಬೇಹುಗಾರಿಕಾ ಕೆಲಸಗಳಲ್ಲಿ ತೊಡಗಿದ್ದ ಹಾಗೂ ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಮರಣದಂಡನೆ ವಿಧಿಸಲಾಗಿದೆ. ಅವರ ವಿರುದ್ಧದ ಎಲ್ಲ ಆರೋಪಗಳೂ ಸಾಬೀತಾಗಿವೆ’ ಎಂದು ಪಾಕಿಸ್ತಾನದ ಸೇನೆ ಹೇಳಿತ್ತು.
ಜಾಧವ್ ಅವರ ಪತ್ನಿ ಮತ್ತು ತಾಯಿಗೆ ಡಿ.25ರಂದು ಭೇಟಿಯಾಗಲು ಅನುಮತಿ ನೀಡಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್ ತಿಳಿಸಿದ್ದಾರೆ.
ಭೇಟಿ ವೇಳೆ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ತನ್ನ ಸಾಪ್ತಾಹಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ.
ಭೇಟಿಗೆ ಪಾಕಿಸ್ತಾನ ಅನುಮತಿ ನೀಡಿದ ಬೆನ್ನಲ್ಲೇ ಈ ಸಂಬಂಧ ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಅವರ ತಾಯಿ ಮತ್ತು ಪತ್ನಿಗೆ ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ. ಜತೆಗೆ, ಸುರಕ್ಷತೆ, ಭದ್ರತೆ ಒದಗಿಸಿ ಸ್ವತಂತ್ರವಾಗಿ ಹೋಗಿ ಬರಲು ಅವಕಾಶ ನೀಡಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.