ಲಂಡನ್: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಕೋರಿ ಭಾರತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಮಲ್ಯ ಹಾಜರಾದರು.
ಈ ಸಂಬಂಧ ಸೋಮವಾರ(ಡಿ.4) ವಿಚಾರಣೆ ಆರಂಭವಾಗಿತ್ತು. ಆದರೆ, ಅಗ್ನಿ ಅವಘಡದಿಂದಾಗಿ ವಿಚಾರಣೆಯನ್ನು ಮೊಟಕುಗೊಳಿಸಿ ಮುಂದೂಡಲಾಗಿತ್ತು. ಬೆಂಕಿ ನಂದಿಸುವ ಸಂದರ್ಭದಲ್ಲಿ ಮಲ್ಯ ಮತ್ತು ಇತರರು ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣ ಹೊರಗೆ ಕಾದಿದ್ದರು.
ಸದ್ಯ ಜಾಮೀನಿನ ಮೇಲೆ ಹೊರಗಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಡಿ. 4ರಿಂದ 14ರ ವರೆಗೆ ವಿಚಾರಣೆ ನಡೆಯಲಿದೆ. ಬಳಿಕ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ನ್ಯಾಯಾಲಯ ತನ್ನ ನಿರ್ಧಾರ ಪ್ರಕಟಿಸಲಿದೆ.
ಭಾರತ–ಬ್ರಿಟನ್ ನಡುವಣ ಪರಸ್ಪರ ಕಾನೂನು ನೆರವು ಒಪ್ಪಂದ(ಎಂಎಲ್ಎಟಿ)ದ ಅಡಿಯಲ್ಲಿ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಬ್ರಿಟನ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಮನವಿ ಮಾಡಿತ್ತು. ಅದನ್ನು ಬ್ರಿಟನ್ ಸರ್ಕಾರ ಪುರಸ್ಕರಿಸಿದ್ದು, ಹಸ್ತಾಂತರಿಸುವ ಕುರಿತು ವಿಚಾರಣೆ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.