ಬೆಂಗಳೂರು: ಯಶವಂತಪುರದ ಮಾರುಕಟ್ಟೆಯಲ್ಲಿ ಹುಲಿ ಚರ್ಮ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಆರ್ಎಂಸಿ ಯಾರ್ಡ್ ಪೊಲೀಸರು ಮೂವರನ್ನು ಬಂಧಿಸಿ ಚರ್ಮ ಜಪ್ತಿ ಮಾಡಿದ್ದಾರೆ.
ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಎರಡು ತಿಂಗಳ ಹಿಂದೆ ಹೆಣ್ಣು ಹುಲಿಯನ್ನು ಆರೋಪಿಗಳು ಬೇಟೆಯಾಡಿದ್ದರು. ಅದರ ಚರ್ಮವನ್ನು ನಗರಕ್ಕೆ ಸಾಗಿಸಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಯತ್ನಿಸಿದ್ದರು ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಆರೋಪಿಗಳ ಹೆಸರನ್ನು ಗೋಪ್ಯವಾಗಿರಿಸಿರುವ ಆರ್ಎಂಸಿ ಯಾರ್ಡ್ ಪೊಲೀಸರು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಹುಲಿಗಳ ಸಂರಕ್ಷಣೆ ಹಾಗೂ ಅವುಗಳ ಗಣತಿಗೆ ಸರ್ಕಾರ ಹಾಗೂ ಸ್ವಯಂಸೇವಕರು ಮುಂದಾಗಿದ್ದಾರೆ. ಅದಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಹೀಗಿರುವಾಗ, ಹಣ ಗಳಿಸುವ ದುರುದ್ದೇಶದಿಂದ ದುಷ್ಕರ್ಮಿಗಳು ಹುಲಿಗಳನ್ನು ಕೊಲ್ಲುತ್ತಿರುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಹುಲಿ ಪ್ರೇಮಿಗಳು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.