ಕೊಲಂಬೊ: ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರು ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.
ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಿರುವ ರವೀಂದ್ರ ಜಡೇಜ ಅವರು ಲಂಕಾ ಎದುರಿನ ಅಂತಿಮ ಹಣಾಹಣಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಅಕ್ಷರ್ಗೆ ಅವಕಾಶ ಒಲಿದಿದೆ.
‘ಜಡೇಜ ನಿಷೇಧ ಶಿಕ್ಷೆಗೆ ಒಳಗಾಗಿರುವ ಕಾರಣ ಮೂರನೇ ಟೆಸ್ಟ್ನಲ್ಲಿ ಆಡುವುದಿಲ್ಲ. ಅವರ ಬದಲಿಗೆ ಬಿಸಿಸಿಐ ಆಯ್ಕೆ ಸಮಿತಿ ಅಕ್ಷರ್ ಪಟೇಲ್ ಅವರನ್ನು 15 ಸದಸ್ಯರ ತಂಡಕ್ಕೆ ಆಯ್ಕೆ ಮಾಡಿದೆ’ ಎಂದು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ತಿಳಿಸಿದ್ದಾರೆ. ಅಕ್ಷರ್ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ‘ಎ’ ತಂಡದ ಪರ ಆಡಿದ್ದರು.
ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 12ರಿಂದ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಅಂತಿಮ ಪಂದ್ಯದಲ್ಲೂ ಎದುರಾಳಿಗಳನ್ನು ಹಣಿದು ಸರಣಿ ‘ಕ್ಲೀನ್ ಸ್ವೀಪ್’ ಸಾಧನೆ ಮಾಡುವ ಗುರಿ ಹೊಂದಿದೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ರೋಹಿತ್ ಶರ್ಮಾ, ಆರ್.ಅಶ್ವಿನ್, ಅಕ್ಷರ್ ಪಟೇಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಇಶಾಂತ್ ಶರ್ಮಾ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಮಹಮ್ಮದ್ ಶಮಿ, ಕುಲದೀಪ್ ಯಾದವ್ ಮತ್ತು ಅಭಿನವ್ ಮುಕುಂದ್.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.