ರಾಮನಗರ: ಅಂಗವಿಕಲರು ಸಾಮಾನ್ಯರಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿರುತ್ತಾರೆ. ಅವರಿಗೆ ಸಾಧ್ಯವಾದಷ್ಟು ಅವಕಾಶಗಳನ್ನು ನೀಡುವ ಮೂಲಕ ಮತ್ತಷ್ಟು ಸಾಧನೆಗೆ ಪ್ರೋತ್ಸಾಹಿಸುವಂತೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಕರೆ ನೀಡಿದರು.
ನಗರದ ಗುರುಭವನದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಸಂಘಟನೆಗಳಿಂದ ನಡೆದ ವಿಶ್ವ ಅಂಗವಿಕಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸೃಷ್ಟಿಕರ್ತನು ಅಂಗವಿಕಲರಿಂದ ಒಂದನ್ನು ಕಸಿದುಕೊಂಡು, ಮತ್ತೊಂದು ವಿಶೇಷ ಸಾಮಥ್ರ್ಯವನ್ನು ದಯಪಾಲಿಸಿದ್ದಾನೆ. ಅಂಗವಿಕಲರಿಗೆ ಅನುಕಂಪ ತೋರುವುದಕ್ಕಿಂತ ಅವರಲ್ಲಿರುವ ಅಭಿರುಚಿ, ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಕಷ್ಟದ ಜೀವನವನ್ನು ಸರಳೀಕರಣಗೊಳಿಸಿಕೊಂಡು ಉಲ್ಲಾಸದಿಂದ ಬದುಕುವುದಕ್ಕೆ ಅಂಗವಿಕಲರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರಿಂದ ಸಾಮಾನ್ಯ ನಾಗರಿಕರು ಕಲಿಯುವುದು ಬಹಳಷ್ಟಿದೆ ಎಂದು ಅವರು ಹೇಳಿದರು.
ಅಂಗವಿಕಲರು ಪ್ರೋತ್ಸಾಹಿಸಿ, ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಯೋಜನೆ ಪಲಾನುಭವಿಗಳಿಗೆ ಸವಲತ್ತು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ಸೌಲಭ್ಯದ ಚೆಕ್, ಕ್ರೀಡಾಕೂಟದಲ್ಲಿ ವಿಜೇತರಾದ ಅಂಗವಿಕಲರಿಗೆ ಬಹುಮಾನ ವಿತರಿಸಲಾಯಿತು. ಅಂಗವಿಕಲರ ಹಕ್ಕುಗಳು, ಸಮಸ್ಯೆಗಳು, ಪರಿಹಾರೋಪಾಯಗಳ ಬಗ್ಗೆ ಸಮರ್ಥನಂ ಸಂಸ್ಥೆಯ ಪ್ರಧಾನ ಸಲಹೆಗಾರರಾದ ಕೆ.ವಿ.ರಾಜಣ್ಣ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಧಿಕಾರಿಗಳಾದ ಶಿವಮೂರ್ತಿ, ಚಂದ್ರು, ಶಿವಶಂಕರೇಗೌಡ, ಪುಟ್ಟಸ್ವಾಮಿ, ತಾಜ್ ಉದ್ದೀನ್ ಖಾನ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.