ಉಡುಪಿ: ಗುಣಾತ್ಮಕ ಹಾಗೂ ಶಿಸ್ತುಬದ್ಧ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಕೆಲಸವನ್ನು ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ. ಉಡುಪಿ ಜಿಲ್ಲೆ ಶೈಕ್ಷಣಿವಾಗಿ ಮುಂದುವರೆಯಲು ಈ ಶಿಕ್ಷಣ ಸಂಸ್ಥೆಗಳ ಪಾತ್ರವೂ ಇದೆ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಕ್ಯಾಥೋಲಿಕ್ ಶಿಕ್ಷಣ ಮಂಡಳಿ ಮಂಗಳೂರು ಹಾಗೂ ಕ್ಯಾಥೋಲಿಕ್ ಶಿಕ್ಷಣ ಸೊಸೈಟಿ ಉಡುಪಿ ಸಂಯುಕ್ತವಾಗಿ ನಗರದ ಹೊರವಲಯದ ಕನ್ನರ್ಪಾಡಿ ಯಲ್ಲಿರುವ ಸಂತಮೇರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮು ಖ್ಯತೆ ನೀಡಲಾಗುತ್ತಿದೆ. ಸಮೀಕ್ಷೆ ಯೊಂದರ ಪ್ರಕಾರ ಅಕ್ಷರ ದಾಸೋಹ, ಪ್ರಾಥಮಿಕ ಶಿಕ್ಷಣದ ಗುಣಮಟ್ಟದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಶಿಕ್ಷಕ ಸಮೂಹವು ಉತ್ತಮ ಸೇವೆ ಸಲ್ಲಿಸುತ್ತಿರುವ ಪರಿಣಾಮ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ ಎಂದರು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರನ್ನು ಗೌರವಿಸುವು ದರಿಂದ ಅವರ ಹೆಮ್ಮೆಯನ್ನು ಹೆಚ್ಚಿಸಿ ದಂತಾಗುತ್ತದೆ ಎಂದರು.
ಅಧ್ಯಾಪನ ವೃತ್ತಿಯು ದೇವರ ಕರೆ ಯಾಗಿದೆ. ಮಕ್ಕಳಲ್ಲಿ ದೇವರನ್ನು ಕಾಣುವ ಮೂಲಕ ಅವರನ್ನು ಉತ್ತಮ ನಾಗರಿ ಕರನ್ನಾಗಿ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. 2014–15ನೇ ಸಾಲಿನ ಧರ್ಮಪ್ರಾಂತ್ಯ ಮಟ್ಟದ ಜಿಲ್ಲಾ ಅತ್ಯುತ್ತಮ ಶಿಕ್ಷಕಿಯಾಗಿ ಆಯ್ಕೆ ಯಾದ ಶಿರ್ವ ಡಾನ್ ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಐರಿನ್ ಅವರನ್ನು ಗೌರವಿಸಲಯಿತು.
ಶಾಸಕ ಪ್ರಮೋದ್ ಮಧ್ವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್. ದಿವಾಕರ ಶೆಟ್ಟಿ, ಸೇಂಟ್ ಮೇರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫ್ರೆಡ್ ಮಸ್ಕರೇನಸ್ ಉಪಸ್ಥಿತರಿದ್ದರು. ಜೆರಾಲ್ಡ್ ಡಿಸೋಜ ಸ್ವಾಗತಿಸಿದರು. ಅಮೃತಾ ಮತ್ತು ವಿನಯ್ ಕಾರ್ಯಕ್ರಮ ನಿರೂಪಿಸಿದರು. ಲಾರೆನ್ಸ್ ಡಿಸೋಜ ವಂದಿಸಿದರು.
ಶಿಕ್ಷಣ ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಬಗೆಹರಿಸಲು ಸರ್ಕಾರ ಸಿದ್ಧವಿದೆ.
- ವಿನಯ ಕುಮಾರ್ ಸೊರಕೆ,
ನಗರಾಭಿವೃದ್ಧಿ ಸಚಿವ