ಕೋಲ್ಕತ್ತ (ಪಿಟಿಐ): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಪಶ್ಚಿಮ ಬಂಗಾಲದ ಐವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಒಬ್ಬ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಾಲ್ದಾ, ಬೀರ್ಭೂಮ್, ಬುರ್ದ್ವಾನ್, ಪಶ್ಚಿಮ ಮಿಡ್ನಾಪುರ ಮತ್ತು ಮುಶಿದಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹಾಗೂ 24 ಪರಗಣ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸುನಿಲ್ ಗುಪ್ತ ಸುದ್ದಿಗಾರರಿಗೆ ತಿಳಿಸಿದರು. ಚುನಾವಣಾ ಆಯೋಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದರ ಬಗ್ಗೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನಾನು ರಾಜ್ಯದ ಮುಖ್ಯಮಂತ್ರಿಯಾಗಿರುವಾಗ ಯಾರ ವರ್ಗಾವಣೆಗೂ ಅವಕಾಶ ಕೊಡುವುದಿಲ್ಲ. ನನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಅದಕ್ಕೂ ಸಿದ್ಧವಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ.
‘ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಚುನಾವಣಾ ಆಯೋಗ ಹೇಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.
‘ಕಾಂಗ್ರೆಸ್ ಪಕ್ಷದ ಜಯವನ್ನು ಸುಲಭಗೊಳಿಸಲು ನೀವು (ಚುನಾವಣಾ ಆಯೋಗ) ಅವರ ಮಾತು ಕೇಳುತ್ತೀರಿ. ನನ್ನ ರಾಜೀನಾಮೆ ಪಡೆಯಿರಿ. ಆದರೆ ಅಧಿಕಾರಿಗಳನ್ನು ಮಾತ್ರ ಈಗಿರುವ ಸ್ಥಾನದಿಂದ ಕದಲಲು ಬಿಡುವುದಿಲ್ಲ’ ಎಂದಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಏ. 17ರಂದು ಮತದಾನ ನಡೆಯಲಿದೆ.