ಬೆಂಗಳೂರು: ಮಹಿಳೆಯ ಜತೆ ಅನು-ಚಿತವಾಗಿ ವರ್ತಿಸಿದ ಆರೋಪದ ಮೇಲೆ ಶ್ರೀನಿವಾಸ್ಭಟ್ (64) ಎಂಬು-ವರ ವಿರುದ್ಧ ಕಮರ್ಷಿಯಲ್ಸ್ಟ್ರೀಟ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀನಿವಾಸ್ಭಟ್ ಅವರು ಇನ್ಫೆಂಟ್ರಿ ರಸ್ತೆಯಲ್ಲಿ ಖಾಸಗಿ ಕಂಪೆನಿ ನಡೆಸುತ್ತಿದ್ದಾರೆ. ಅವರಿಗೆ ಜೆ.ಪಿ.ನಗರದ ಮಹಿಳೆ-ಯೊಬ್ಬರು ಸಾಲ ಕೊಟ್ಟಿದ್ದರು. ಆ ಮಹಿಳೆಯು ಆ.25ರಂದು ಶ್ರೀನಿವಾಸ್-ಭಟ್ ಅವರ ಕಚೇರಿಗೆ ಹೋಗಿದ್ದ ಸಂದರ್ಭದಲ್ಲಿ ಹಣಕಾಸು ವಿಷಯವಾಗಿ ಪರಸ್ಪರರ ಮಧ್ಯೆ ವಾಗ್ವಾದ ನಡೆದು ಜಗಳವಾಗಿದೆ. ಆಗ ಶ್ರೀನಿವಾಸ್ಭಟ್ ಅವರು ಮಹಿಳೆಯ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮಹಿಳೆಯು ದೂರು ನೀಡಿದ್ದಾರೆ. ಆ ದೂರು ಆಧರಿಸಿ ಹಲ್ಲೆ, ಅನುಚಿತ ವರ್ತನೆ, ಅಪರಾಧ ಸಂಚು ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಶ್ರೀನಿವಾಸ್ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತ: ಟೆಕ್ಕಿ ಸಾವು
ಹೊಸೂರು ರಸ್ತೆಯ ಹುಸ್ಕೂರು ಗೇಟ್ ಬಳಿ ಮಂಗಳವಾರ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಿಂಡು ಕೃತಿಮೂರ್ತಿ (23) ಎಂಬ ಸಾಫ್ಟ್ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶ ಮೂಲದ ಅವರು ಜಿಗಣಿ ಬಳಿಯ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪರಪ್ಪನ ಅಗ್ರಹಾರ ಸಮೀಪದ ಚನ್ನಕೇಶವನಗರದಲ್ಲಿ ವಾಸವಾಗಿದ್ದ ಕೃತಿಮೂರ್ತಿ ಅವರು ಬೈಕ್ನಲ್ಲಿ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬಸ್ ಅವರ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಅವರ ಮೇಲೆ ಬಸ್ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಂತರ ಬಸ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಎಲೆಕ್ಟ್ರಾನಿಕ್ಸಿಟಿ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.