ಥಾಣೆ (ಪಿಟಿಐ): ಮಹಾರಾಷ್ಟ್ರದಲ್ಲಿ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಚರಂಡಿ ನೀರಿನಲ್ಲಿ ಬೆರೆತ ಪರಿಣಾಮ ಇದನ್ನು ಸೇವಿಸಿದ ಇಲ್ಲಿನ ಉಲ್ಲಾಸನಗರದ ಸುಮಾರು 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಭಾನುವಾರ ನಡೆದಿದೆ.
ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಸೇವಿಸಿದ ಜನರು ಕಣ್ಣು ಉರಿ, ತಲೆಸುತ್ತು ಹಾಗೂ ಉಸಿರಾಟದ ತೊಂದರೆಯಿಂದ ಅಸ್ವಸ್ಥರಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಸ್ವಸ್ಥಗೊಂಡವರನ್ನು ಇಲ್ಲಿನ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚೇತರಿಸಿಕೊಂಡವರನ್ನು ಮನೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಉಲ್ಲಾಸನಗರದಿಂದ ಅಂಬರನಾಥದವರೆಗೆ ಹರಿಯುವ ಚರಂಡಿ ನೀರಿಗೆ ಅಪಾಯಕಾರಿ ರಾಸಾಯನಿಕವನ್ನು ಬೆರೆಸಲಾಗಿದೆ ಎಂದು ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿ ದುರಂತಕ್ಕೆ ಕಾರಣವನ್ನು ಪತ್ತೆಹಚ್ಚಿದೆ. ಪೊಲೀಸರು ಈ ಸಂಬಂಧ ಐಪಿಸಿ ಸೆಕ್ಷನ್ 277 ಹಾಗೂ 278 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.