ಬೆಂಗಳೂರು: ಶೈಕ್ಷಣಿಕ ಉದ್ದೇಶಕ್ಕಾಗಿ ಬಲಿಜ ಸಮುದಾಯವನ್ನು ‘3 ಎ’ ನಿಂದ ‘2 ಎ’ ಗೆ ಸೇರಿಸಿ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸುವ ಬೇಡಿಕೆ ಬಗ್ಗೆ ಆರು ತಿಂಗಳ ಒಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಈ ಬಗ್ಗೆ ಕರ್ನಾಟಕ ಪ್ರದೇಶ ಕುರುಬರ ಸಂಘ, ಈಡಿಗರ ಸಂಘ, ವಿಶ್ವಕರ್ಮ ಸಮಾಜ, ಸವಿತಾ ಸಮಾಜ, ಮಡಿವಾಳ ಮಾಚಿದೇವ ಟ್ರಸ್್ಟ , ತಿಗಳರ ವಿದ್ಯಾಭಿವೃದ್ಧಿ ಸಂಘ, ದೊಂಬಿದಾಸರ ಕ್ಷೇಮಾಭಿವೃದ್ಧಿ ಸಂಘಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅದು ವಿಲೇವಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠವು, ‘ಅರ್ಜಿದಾರರು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಮೂರು ವಾರಗಳ ಒಳಗೆ ಮನವಿ ಸಲ್ಲಿಸಬೇಕು’ ಎಂದು ಸೂಚಿಸಿದೆ.
‘ಕಾರ್ಯದರ್ಶಿಯವರು ಹಿಂದುಳಿದ ವರ್ಗಗಳ ಆಯೋಗದಿಂದ ಸೂಕ್ತ ವರದಿ ತರಿಸಿಕೊಳ್ಳಬೇಕು. ಈ ಅಧಿಸೂಚನೆ ಸರಿಯಿದೆಯೊ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕು’ ಎಂದು ತಾಕೀತು ಮಾಡಿದೆ.
ಅರ್ಜಿದಾರರ ವಾದ
2011ರ ಜುಲೈ 16ರಂದು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿ ಬಲಿಜ ಸಮುದಾಯಕ್ಕೆ 2ಎ ನಲ್ಲಿ ಶಿಕ್ಷಣ ಸೌಲಭ್ಯ ಪಡೆಯಲು ಆದೇಶಿಸಿತ್ತು.