ಬೆಂಗಳೂರು: ವೇತನ ತಾರತಮ್ಯ ನಿವಾರಣೆ ಹಾಗೂ ಕಾಲ್ಪನಿಕ ವೇತನ ನೀಡುವಂತೆ ಒತ್ತಾಯಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘವು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನವನ್ನು ಅರ್ಧ ದಿನದ ಕಾಲ ಬಹಿಷ್ಕರಿಸುವುದಾಗಿ ಎಚ್ಚರಿಸಿದೆ.
ಈ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರು, ‘ ಬೇಡಿಕೆ ಈಡೇರಿಸುವಲ್ಲಿ ನಿರ್ಲಕ್ಷ್ಯ ತೋರಿದ ಸರ್ಕಾರದ ಧೋರಣೆ ಖಂಡಿಸಿ ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಇದಕ್ಕೂ ಮುನ್ನಾ ಘೋಷಿಸಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈಗ ತನ್ನ ನಿಲುವು ಸಡಿಸಿಲಿದೆ’ ಎಂದು ತಿಳಿಸಿದರು.
‘2011ರಲ್ಲಿ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಘೋಷಿಸಿದಾಗ ಸರ್ಕಾರ, ಅನಿವಾರ್ಯವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿ ವರದಿ ನೀಡಿ, ನಾಲ್ಕು ವರ್ಷವಾಗಿವೆ. ಆದರೆ, ವರದಿ ಇನ್ನೂ ಜಾರಿಗೆ ಬಂದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
‘ಈ ವರ್ಷವೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ಮೌಲ್ಯ ಮಾಪನದ ಆರಂಭದ ಅರ್ಧ ದಿನ ಸಾಂಕೇತಿಕವಾಗಿ ಕಪ್ಪು ಪಟ್ಟಿ ಕಟ್ಟಿಕೊಂಡು ಮೌಲ್ಯಮಾಪನ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.