ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ರಾಜ್ಯದ ಪ್ರಾಥಮಿಕ ಶಿಕ್ಷಣ ಇಲಾಖೆಯ ದೌರ್ಬಲ್ಯವನ್ನು ಬಹಿರಂಗಪಡಿಸಿದೆ. ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತ ಸಮರ್ಪಕವಾಗಿ, ನಿಯಮಬದ್ಧವಾಗಿ ಇರಬೇಕಾಗುತ್ತದೆ.
ಆದರೆ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿದ್ದು ಶಿಕ್ಷಕರು ಅನುಪಾತಕ್ಕಿಂತ ಹೆಚ್ಚಾಗಿದ್ದಾರೆ. ಹಾಗಾಗಿ ಎಲ್ಲ ಜಿಲ್ಲೆಗಳಲ್ಲಿ ಕಡಿಮೆ ಶಿಕ್ಷಕರಿರುವ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರ ನಿಯುಕ್ತಿಗೆ ಚಾಲನೆ ದೊರಕಿತು. ಈ ಪ್ರಕ್ರಿಯೆ ಅಸಮಂಜಸ, ಅವೈಜ್ಞಾನಿಕ ಎಂದು ವಿದ್ಯಾರ್ಥಿಗಳು, ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸರ್ಕಾರದ ಗಮನ ಸೆಳೆದಿದ್ದಾರೆ.
ರಾಜ್ಯ ಸರ್ಕಾರ ಕಾಲಕಾಲಕ್ಕೆ ಶಿಕ್ಷಕರ ನೇಮಕ ಮಾಡಿಕೊಂಡಿಲ್ಲದಿರುವುದು ತಪ್ಪಲ್ಲವೇ? ಕ್ಷೇತ್ರ ಶಿಕ್ಷಣಾಧಿಕಾರಿಯು ಆರ್ಟಿಇ ನಿಯಮಾವಳಿಯ ಅನ್ವಯ ಹೆಚ್ಚುವರಿ ಶಿಕ್ಷಕರನ್ನು ನಿಯುಕ್ತಿ ಮಾಡಿದ್ದರೂ, ಪುತ್ತೂರು ತಾಲ್ಲೂಕಿನ 7 ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಣೆಯಾಗದಿರುವುದು ವಿಪರ್ಯಾಸ. ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಜೀರ್ಣೋದ್ಧಾರ ಮಾಡಬೇಕಾದುದು ಅನಿವಾರ್ಯವಾಗಿದೆ.