ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳ ಒತ್ತಡದ ಭಾರ ತಡೆದುಕೊಳ್ಳಲು ಐವರು ಸಂಸದೀಯ ಕಾರ್ಯದರ್ಶಿಗಳ ಹುದ್ದೆಗಳನ್ನು ಸೃಷ್ಟಿಸಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿಗೂ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಪುನರ್ರಚನೆ ಪ್ರಸ್ತಾವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈಗ ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಲು ಅವರು ನಿರ್ಧರಿಸಿದ್ದಾರೆ. ಆದರೆ, ಸಂಪುಟ ಸೇರಲು ಪ್ರಯತ್ನಿಸುತ್ತಿರುವವರ ಸಂಖ್ಯೆ 50ಕ್ಕೂ ಹೆಚ್ಚಿದೆ. ಸಂಸದೀಯ, ರಾಜಕೀಯ ಕಾರ್ಯದರ್ಶಿಗಳ ಹುದ್ದೆ ಸೃಷ್ಟಿಸಿ ಆಕಾಂಕ್ಷಿಗಳನ್ನು ಸಮಾಧಾನ ಪಡಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸಂಪುಟ ವಿಸ್ತರಣೆ, ನಿಗಮ ಹಾಗೂ ಮಂಡಳಿಗಳ ನೇಮಕ ಕುರಿತು ಇತ್ತೀಚೆಗೆ ಸಮಾಲೋಚನೆ ನಡೆಸಿದ್ದಾರೆ. ಸಂಸದೀಯ ಕಾರ್ಯದರ್ಶಿಗಳು ಹಾಗೂ ರಾಜಕೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿಗೆ ಈ ಸಂದರ್ಭದಲ್ಲಿ ಒಮ್ಮತಕ್ಕೆ ಬರಲಾಗಿದೆ. ಸಂಪುಟ ವಿಸ್ತರಣೆಯ ಬೆನ್ನಲ್ಲೇ ಈ ನೇಮಕಾತಿ ನಡೆಯುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.
ಒಕ್ಕಲಿಗರು, ಲಿಂಗಾಯತರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗಗಳ ತಲಾ ಒಬ್ಬರನ್ನು ಸಂಸದೀಯ ಕಾರ್ಯದರ್ಶಿ ಹುದ್ದೆಗೆ ನೇಮಿಸುವ ಯೋಚನೆ ಕಾಂಗ್ರೆಸ್ ನಾಯಕರಲ್ಲಿದೆ. ಯುವ ಶಾಸಕರನ್ನೇ ಈ ಹುದ್ದೆಗೆ ನೇಮಿಸಬೇಕು ಎಂದು ತೀರ್ಮಾನಿಸಲಾಗಿದೆ.
ಎ.ಮಂಜು, ರಾಜಶೇಖರಗೌಡ ಸೇರಿದಂತೆ ಹಲವು ಶಾಸಕರ ಹೆಸರು ಪರಿಶೀಲನೆಯಲ್ಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಯಾರನ್ನು ನೇಮಿಸಬೇಕು ಎಂಬುದನ್ನು ಸಿದ್ದರಾಮಯ್ಯ ಅವರೇ ನಿರ್ಧರಿಸಲಿದ್ದಾರೆ. ಈ ವಿಷಯವನ್ನು ಅವರ ನಿರ್ಧಾರಕ್ಕೆ ಬಿಡುವ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿಪಕ್ಷಗಳ ಟೀಕೆ ಮತ್ತು ವಾಗ್ದಾಳಿಗಳಿಗೆ ಸಮರ್ಥ ಉತ್ತರ ನೀಡಬಲ್ಲ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಸಂಸದೀಯ ಕಾರ್ಯದರ್ಶಿಗಳು ಮತ್ತು ರಾಜಕೀಯ ಕಾರ್ಯದರ್ಶಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡುವ ಸಂಭವವಿದೆ. ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ನೇಮಕಾತಿಗಳ ಬಗ್ಗೆಯೂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಪ್ರಸ್ತಾಪಿಸಲಿದ್ದಾರೆ. ವರಿಷ್ಠರ ಅನುಮತಿ ಪಡೆದು ನೇಮಕಾತಿ ಅಂತಿಮಗೊಳಿಸಲಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.