ಬೆಂಗಳೂರು: ‘ದಿ ಇಂದಿರಾನಗರ್ ಕೇಂಬ್ರಿಡ್ಜ್ ಇಂಗ್ಲಿಷ್ ಶಾಲೆ’ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಬಂಧಿಸಲಾಗಿರುವ ಆರೋಪಿ ಜೈಶಂಕರ್ನನ್ನು ಹೆಚ್ಚಿನ ತನಿಖೆಗಾಗಿ ನ.7ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನಗರ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಜೈಶಂಕರ್ನನ್ನು ಶುಕ್ರವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪ್ರಕರಣದ ತನಿಖಾಧಿಕಾರಿಗಳು, ಆತನನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು ಏಳು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದರು.
ಕಮಿಷನರ್ ಭೇಟಿ: ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಅವರು ತಿಪ್ಪಸಂದ್ರದಲ್ಲಿನ ದಿ ಇಂದಿರಾನಗರ್ ಕೇಂಬ್ರಿಡ್ಜ್ ಇಂಗ್ಲಿಷ್ ಶಾಲೆಗೆ ಶುಕ್ರವಾರ ಭೇಟಿ ನೀಡಿ ಇತರೆ ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾತುಕತೆ ನಡೆಸಿದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಶಾಲೆಗೆ ಬಂದ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಪೋಷಕರ ಜತೆ ಎರಡು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿ, ಅವರ ಅಹವಾಲು ಆಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ‘ಆರೋಪಿ ಜೈಶಂಕರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಸಿಬ್ಬಂದಿಯು ಸಾಧ್ಯವಾದಷ್ಟು ಬೇಗನೆ ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುತ್ತಾರೆ’ ಎಂದರು.
‘ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿ ಯಿಂದ ಹೊರಡಿಸಿರುವ ಮಾರ್ಗಸೂಚಿ ಯನ್ನು ಶಾಲಾ ಆಡಳಿತ ಮಂಡಳಿಯು ಅಳವಡಿಸಿಕೊಂಡಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಾಲೆ ಯಲ್ಲಿ ಹೆಚ್ಚಿನ ಸಿ.ಸಿ ಕ್ಯಾಮೆರಾಗಳನ್ನು ಹಾಕಿಲ್ಲ ಮತ್ತು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಲ್ಲಿ ಜಿಪಿಎಸ್ ವ್ಯವಸ್ಥೆ ಅಳವಡಿಸಿಲ್ಲ’ ಎಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಮತ್ತೊಂದು ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಹೇಳಿದರು.