ಬೆಂಗಳೂರು: ದ್ವಿತೀಯ ಪಿ.ಯು ರಸಾಯನ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆ ಹಾಜರುಪಡಿಸುವಂತೆ ಹೈಕೋರ್ಟ್ ಸಿಐಡಿಗೆ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಬಿಳ್ಳಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ಸಿಐಡಿ ಪರ ವಕೀಲರು, ‘ಪ್ರಕರಣದಲ್ಲಿನ ಆರೋಪಿ ಈರಮಲ್ಲಪ್ಪ ತನ್ನ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಕಲಂ 19ರ ಅನುಸಾರ ಆರೋಪಿಯ ಹೇಳಿಕೆಯನ್ನೇ ಅಪರಾಧ ಎಸಗಿದೆ ಎಂದು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.
ಈರಮಲ್ಲಪ್ಪ ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ನಿವಾಸಿಯಾಗಿದ್ದು ಇವರನ್ನು ಮೇ ತಿಂಗಳಿನಲ್ಲಿ ಕೋಕಾ ಕಾಯ್ದೆಯಡಿ ಬಂಧಿಸಲಾಗಿದೆ. ತನ್ನ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದನ್ನು ಈರಮಲ್ಲಪ್ಪ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಿದ್ದಾರೆ.