ಬೆಂಗಳೂರು: ‘ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್ಟಿಇ) ಸರ್ಕಾರವೇ ಹಣ ಕೊಟ್ಟು ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದೆ. ಕನ್ನಡ ಭಾಷೆಯನ್ನು ಹಂತ ಹಂತವಾಗಿ ನಿರ್ನಾಮ ಮಾಡುವಂತಹ ಕಾಯ್ದೆ ಇದು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.
ಕನ್ನಡ ಅಭಿವದ್ಧಿ ಪ್ರಾಧಿಕಾರವು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸರ್ಕಾರಿ ಶಾಲೆಗಳ ಸಬಲೀಕರಣ ಸಾಧ್ಯತೆಮತ್ತು ಸವಾಲುಗಳು’ ಕುರಿತವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಇಡೀ ದೇಶಕ್ಕೆ ಅನ್ವಯಿಸುವ ಏಕರೂಪದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಬೇಕು. ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.
‘ಅಲ್ಪಸಂಖ್ಯಾತ ಭಾಷೆಗಳ ರಕ್ಷಣೆಗಿರುವ ಕಾನೂನುಗಳು ದೇಶೀಯ ಭಾಷೆಗಳಿಗೆ ಅನ್ವಯವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಇದನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚಳವಳಿ ನಡೆಯಬೇಕು’ ಎಂದು ಹೇಳಿದರು.