ನವದೆಹಲಿ (ಪಿಟಿಐ): ಅಲ್ಪಸಂಖ್ಯಾತ ಸಂಸ್ಥೆಗಳು ಶಿಕ್ಷಣ ಹಕ್ಕು (ಆರ್ಟಿಇ) ಕಾಯ್ದೆಯಡಿ ಹಿಂದುಳಿದ ವರ್ಗಕ್ಕೆ ಸೇರಿದ ಮಕ್ಕಳಿಗೆ ಶೇ 25ರಷ್ಟು ಸೀಟುಗಳನ್ನು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಅನುದಾನಿತ ಹಾಗೂ ಅನುದಾನರಹಿತ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಆರ್ಟಿಇ ಅನ್ವಯಿಸದು ಎಂದಿರುವ ಸಂಸ್ಥೆಗಳು ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದವು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಆರ್.ದವೆ ಮತ್ತು ಯು.ಯು.ಲಲಿತ್ ಅವರಿದ್ದ ಪೀಠ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಇದೇ ವೇಳೆ, ಉತ್ತಮ ಗುಣಮಟ್ಟದ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ. ಗುಣಮಟ್ಟಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ನಮ್ಮ ದೇಶದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಿಗಿಂತ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೇ ಒಳ್ಳೆಯ ಹೆಸರಿದೆ. ಅದೇ ರೀತಿಯಲ್ಲಿ ಪ್ರಾಥಮಿಕ ಹಂತದಲ್ಲಿ ಅತ್ಯುತ್ತಮ ಶಾಲೆಗಳನ್ನು ಏಕೆ ತೆರೆಯಬಾರದು ಎಂದು ನ್ಯಾಯಾಲಯ ಕೇಳಿದೆ.