ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) ಆಸ್ಪತ್ರೆ ನಿರ್ಮಿಸುವುದರೊಂದಿಗೆ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ವತಿಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಲ್ ಇಂಡಿಯ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಾರೆಡ್ಡಿ, ಕೈಗಾರಿಕಾ ಪ್ರದೇಶದಲ್ಲಿ ನೂರಾರು ಕಾರ್ಖಾನೆಗಳು ತಲೆ ಎತ್ತಿದ್ದು, ಸಹಸ್ರಾರು ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಕಾರ್ಮಿಕರಿಗೆ ಆರೋಗ್ಯ ರಕ್ಷಣೆ ನೀಡುವ ಇಎಸ್ಐಸಿ ಆಸ್ಪತ್ರೆ ಸೂಕ್ತ ಸೌಲಭ್ಯಗಳಿಲ್ಲ ಎಂದು ದೂರಿದರು.
ಸರ್ಕಾರ ಕೂಡಲೇ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭವಾಗಬೇಕು. ಕೇವಲ ಶಂಕುಸ್ಥಾಪನೆ ಮಾಡಿ ಆಸ್ಪತ್ರೆ ನಿರ್ಮಾಣ ಮರೆತಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚರಗೊಳ್ಳಬೇಕು ಎಂದು ಆಗ್ರಹಿಸಿದರು.
ಕೈಗಾರಿಕಾ ಪ್ರದೇಶ ಹಾಗೂ ಅಪೇರೆಲ್ ಪಾರ್ಕ್ಗಳಿಗೆ ಸಾರಿಗೆ ಸೌಲಭ್ಯ ನೀಡಬೇಕು. ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ವಿದ್ಯುತ್ ದೀಪ, ರಸ್ತೆ ದುರಸ್ಥಿ ಮಾಡಬೇಕು. ಕಾರ್ಮಿಕರಿಗೆ ಹೆಚ್ಚುವರಿ ಕೆಲಸಕ್ಕೆ ಸೂಕ್ತ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎ.ಐ.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿ ಸತ್ಯಾನಂದ, ತಾಲ್ಲೂಕು ಮುಖಂಡರಾದ ರಾಜಘಟ್ಟಮಹೇಶ್, ಶಿವಾರೆಡ್ಡಿ, ಶಿವಕುಮಾರ್, ಬಾಲು,ಲೋಕೇಶ್, ಡಿ.ಜಿ. ಸುರೇಶ್ ಭಾಗವಹಿಸಿದ್ದರು.