ಲಖನೌ: ಬದಾಯೂಂ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೇಶದಾದ್ಯಂತ ಪ್ರಟಕವಾಗುತ್ತಿರುವ ಆಕ್ರೋಶದ ಮಧ್ಯೆಯೇ ಅಂತಹುದೇ ಮತ್ತೊಂದು ಘಟನೆ ಇಟಾವಾ ಜಿಲ್ಲೆಯಲ್ಲಿ ವರದಿಯಾಗಿದೆ.
ಇಟಾವಾ ಜಿಲ್ಲೆಯ ಸಿಯಾಪುರ್ ಗ್ರಾಮದಲ್ಲಿ 13 ಮತ್ತು 15 ವರ್ಷ ವಯಸ್ಸಿನ ಇಬ್ಬರು ಸಹೋದರಿಯರು ಗುರುವಾರ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಇಬ್ಬರು ಸಹೋದರಿಯರು ಗೋಧಿ ಹಿಟ್ಟು ಮಾಡಿಸುವುದಕ್ಕಾಗಿ ನೆರೆಯ ಗ್ರಾಮದ ಗಿರಣಿಗೆ ಗೋಧಿ ಹೊತ್ತುಕೊಂಡು ಹೋಗುತ್ತಿದ್ದಾಗ ಮೂವರು ಯುವಕರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕರನ್ನು ಮಹಿಪಾಲ್, ರಾಜ್ಪಾಲ್ ಮತ್ತು ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಬಾಲಕಿಯರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ಅವರನ್ನು ಸಮೀಪದ ಹೊಲಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಕೂಗಿದರೆ ಕೊಲ್ಲುವುದಾಗಿಯೂ ಬೆದರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ತಮ್ಮ ಗ್ರಾಮ ಮನುಪುರಕ್ಕೆ ಬಾಲಕಿಯರು ಹಿಂದಿರುಗಿ ಹೆತ್ತವರಿಗೆ ಮಾಹಿತಿ ನೀಡುವುದರೊಂದಿಗೆ ಪ್ರಕರಣ ಬೆಳಕಿಗೆ ಬಂತು.
ಬದಾಯೂಂ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನಿಷ್ಕ್ರಿಯರಾಗಿದ್ದರು ಎಂಬ ಕಾರಣಕ್ಕೆ ಎಲ್ಲೆಡೆಯಿಂದ ಭಾರಿ ಟೀಕೆಗೆ ಒಳಗಾಗಿದ್ದ ಪೊಲೀಸರು ಇಟಾವಾ ಜಿಲ್ಲೆಯಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಎಲ್ಲ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಬಾಲಕಿಯ ಮನೆಗೆ ಸಾಕಷ್ಟು ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದೆ. ಕಳೆದ ಮೂರೇ ದಿನಗಳಲ್ಲಿ 12ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.