ಕಲಬುರ್ಗಿ (ಪಿಟಿಐ): ಸಿಕಂದರಾಬಾದ್– ಮುಂಬೈ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಕಲಬುರ್ಗಿಯಿಂದ ಸುಮಾರು 20 ಕಿ.ಮೀ ದೂರದ ಮರ್ತೂರು ಬಳಿ ರೈಲಿನ 9 ಬೋಗಿಗಳು ಉರುಳಿವೆ. ಮಧ್ಯರಾತ್ರಿ 2.15ರ ಸುಮಾರಿಗೆ ಘಟನೆ ನಡೆದಿದೆ ಎಂದು ಕಲಬುರ್ಗಿಯ ಎಸ್ಪಿ ಅಮಿತ್ ಸಿಂಗ್ ತಿಳಿಸಿದ್ದಾರೆ.
ಗಾಯಗೊಂಡವರನ್ನು ಮಹಾರಾಷ್ಟರದ ಸೊಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಸಿಂಗ್ ಹೇಳಿದ್ದಾರೆ.
ರೈಲ್ವೆ ಸಚಿವ ಸುರೇಶ್ ಪ್ರಭು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಕೇಂದ್ರ ವಲಯದ ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಎ.ಕೆ. ಮಿತ್ತಲ್ ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ರೂ. 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ರೂ. 50 ಸಾವಿರ ಹಾಗೂ ಸಾಮಾನ್ಯ ಗಾಯಗಳಾದವರಿಗೆ ರೂ. 25 ಸಾವಿರ ಪರಿಹಾರ ಘೋಷಿಸಲಾಗಿದೆ.