ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರಬಿದ್ದಿದೆ. ಆದರೆ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣೆಯಲ್ಲಿ ಸ್ಪರ್ಧಿಸುವುದರ ಬಗ್ಗೆ ಇಲ್ಲಿಯವರೆಗೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ.
ಅಧಿಸೂಚನೆ ಹೊರಡಿಸಿದ ದಿನದಂದೇ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿರ್ಧಾರಕ್ಕೆ ಬರಲಾಗುವುದು ಎಂದು ಪಕ್ಷ ತಿಳಿಸಿತ್ತು. ಆದರೆ, ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.
‘ಸೋಮವಾರ ಸಭೆ ಸೇರಿ ತೀರ್ಮಾನಕ್ಕೆ ಬರಲು ಉದ್ದೇಶಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆ ಸೇರಲು ಸಾಧ್ಯವಾಗಲಿಲ್ಲ. ಈ ಸಂಬಂಧ ಪಕ್ಷವು ಇನ್ನು 2–3 ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಪಕ್ಷದ ರಾಜ್ಯ ಸಂಚಾಲಕ ಸಿದ್ಧಾರ್ಥ ಶರ್ಮಾ ಅವರು ಸೋಮವಾರ ‘ಪ್ರಜಾವಾಣಿ’ಗೆ ತಿಳಿಸಿದರು.
‘ಒಂದು ಕಡೆಗೆ ರಾಜ್ಯ ಸರ್ಕಾರವು ಚುನಾವಣೆ ನಡೆಸುತ್ತಿದೆ. ಇನ್ನೊಂದೆಡೆ ಬಿಬಿಎಂಪಿ ವಿಭಜನೆಗೆ ಪ್ರಯತ್ನಿಸುತ್ತಿದೆ. ಹಾಗಾಗಿ ಈ ಎಲ್ಲ ವಿಚಾರಗಳ ಬಗ್ಗೆ ಗಂಭೀರವಾಗಿ ಸಮಾಲೋಚಿಸಿದ ನಂತರವಷ್ಟೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.