ಬೆಂಗಳೂರು: ಎತ್ತಿನಹೊಳೆ ಯೋಜನೆಯ ತಾಂತ್ರಿಕ ಬಿಡ್ ಸೋಮವಾರ ತೆರೆಯಲಾಗುತ್ತದೆ. ಹಣಕಾಸು ಬಿಡ್ ಫೆಬ್ರುವರಿ 7ಕ್ಕೆ ತೆರೆಯಲಿದ್ದು, ಫೆ.15ಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಯೋಜನೆಗೆ ಸಂಬಂಧಿಸಿದಂತೆ ಉಂಟಾ-ಗಿರುವ ವಿವಾದ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚಿಕ್ಕ ಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ನೀಡಿದ್ದಾರೆ.
‘ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಮತ್ತಿತರ ಜಿಲ್ಲೆಗಳಿಗೆ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಚರ್ಚೆ ನಡೆದಿದೆ. ಯೋಜನೆ ಬಗ್ಗೆ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಯು ತ್ತಿದೆ. ಸಾರ್ವಜನಿಕರು ಗೊಂದಲಗಳಿಗೆ ಕಿವಿಗೊಡದೇ ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ಜೊತೆ ಕೈಜೋಡಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
‘ಸ್ಥಳೀಯ ಜನಪ್ರತಿನಿಧಿಗಳು ಮತ್ತು ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕವೇ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗುವುದು. ಸ್ಥಳೀಯರಿಗೆ ಮನವೊಲಿಕೆ ಮಾಡಿದ ಬಳಿಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರದ ಯೋಜನೆಯಾಗಿ ಪರಿಗಣಿಸಲು ಒತ್ತಾಯ
ಬೆಂಗಳೂರು: ‘ಎತ್ತಿನಹೊಳೆ ಯೋಜನೆಯನ್ನು ಕೇಂದ್ರ ಸರ್ಕಾರದ ಯೋಜನೆ ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದು ಭಾರತೀಯ ರೈತ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ನರಸಿಂಹಪ್ಪ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ₨12,912 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಮೊತ್ತದ ಹಣವನ್ನು ಉದ್ದೇಶಿತ ಯೋಜನೆಗೆ ರಾಜ್ಯ ಸರ್ಕಾರ ನೀಡಲು ಕಷ್ಟವಾಗುತ್ತದೆ. ಆದ್ದರಿಂದ ಯೋಜನೆಯನ್ನು ಕೇಂದ್ರ ಸರ್ಕಾರದ ಯೋಜನೆ ಎಂದು ಪರಿಗಣಿಸುವಂತೆ ಕೇಂದ್ರದ ಸರ್ಕಾರದ ಮೇಲೆ ಪಕ್ಷಬೇಧ ಮರೆತು ಒತ್ತಡ ತರಬೇಕು ಎಂದು ಹೇಳಿದರು.
ಈ ಯೋಜನೆಯಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜೊತೆಗೆ ಬೆಂಗಳೂರು ಉತ್ತರ ಭಾಗಕ್ಕೂ ನೀರು ಒದಗಿಸಬಹುದಾಗಿದೆ. ಯೋಜನೆ ಜಾರಿಯಾದರೆ 50 ಲಕ್ಷಕ್ಕು ಹೆಚ್ಚು ಜನರಿಗೆ ಕುಡಿಯುವ ನೀರನ್ನು ಒದಗಿಸಬಹುದಾಗಿದೆ ಎಂದು ಅವರು ತಿಳಿಸಿದರು.
ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.