ನಾಗಪುರ (ಪಿಟಿಐ): ಮಹಾರಾಷ್ಟ್ರದ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಎನ್ಸಿಪಿಯ ಹಿರಿಯ ಮುಖಂಡರಾದ ಸುನಿಲ್ ತತ್ಕರೆ ಮತ್ತು ಛಗನ್ ಭುಜಬಲ್ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಒಪ್ಪಿಗೆ ನೀಡಿದ್ದಾರೆ.
ಅಜಿತ್ ಪವಾರ್ ಮತ್ತು ತತ್ಕರೆ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಕೈಗೊಳ್ಳಲಾದ ನೀರಾವರಿ ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ರಾಜ್ಯದ ಭ್ರಷ್ಟಾಚಾರ ತಡೆ ಘಟಕಕ್ಕೆ ಸೂಚಿಸಲಾಗಿದೆ.
ಭುಜಬಲ್ ಅವರು ಲೋಕೋಪಯೋಗಿ ಸಚಿವರಾಗಿದ್ದ ಅವಧಿಯಲ್ಲಿ ದೆಹಲಿಯಲ್ಲಿ ನಿರ್ಮಿಸಲಾದ ‘ಮಹಾರಾಷ್ಟ್ರ ಸದನ’ ಮತ್ತು ಮುಂಬೈಯಲ್ಲಿ ನಿರ್ಮಿಸಲಾದ ಎರಡು ಕಟ್ಟಡ ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಇದೆ. ಈ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ.
ಭ್ರಷ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಈ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಅವರ ವಿರುದ್ಧವೂ ತನಿಖೆ ನಡೆಯಲಿದೆ ಎಂದು ಮಹಾರಾಷ್ಟ್ರ ಅಡ್ವೊಕೇಟ್ ಜನರಲ್ ಸುನಿಲ್ ಮನೋಹರ್ ತಿಳಿಸಿದ್ದಾರೆ.