ಬೆಂಗಳೂರು: ನಗರದ ವಿವಿಧೆಡೆ ಶನಿವಾರ ರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಪಾನಮತ್ತರಾಗಿ ವಾಹನ ಚಾಲನೆ ಮಾಡುತ್ತಿದ್ದ 974 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರ ಚಾಲನಾ ಪರವಾನಗಿ ಅಮಾನತುಪಡಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ (ಆರ್ಟಿಒ) ಶಿಫಾರಸು ಮಾಡಿದ್ದಾರೆ.
ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ನಗರದ 126 ಸ್ಥಳಗಳಲ್ಲಿ ರಾತ್ರಿ 9 ಗಂಟೆಯಿಂದ 2ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ, 13,677 ಮಂದಿ ವಾಹನ ಸವಾರರನ್ನು ತಪಾಸಣೆ ಮಾಡಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ತಪಾಸಣೆ ವೇಳೆ ಒಂದು ಬಸ್, 21 ಲಾರಿ, 50 ಆಟೊ, 162 ಕಾರು, 12 ಮ್ಯಾಕ್ಸಿ ಕ್ಯಾಬ್, 15 ಟೆಂಪೊ ಚಾಲಕರು ಮತ್ತು 713 ಬೈಕ್ ಸವಾರರು ಪಾನಮತ್ತರಾಗಿ ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಅವರಲ್ಲಿ 972 ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಪೀಣ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆ ಎಲ್ಲಾ ವಾಹನ ಸವಾರರ ಚಾಲನಾ ಪರವಾನಗಿ ಅಮಾನತುಪಡಿಸುವಂತೆ ಆರ್ಟಿಒಗಳಿಗೆ ವರದಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏ.5 ಹಾಗೂ ಏ.12ರ ರಾತ್ರಿ ಇದೇ ರೀತಿ ವಿಶೇಷ ಕಾರ್ಯಾಚರಣೆ ನಡೆಸಿದ್ದ ಸಂಚಾರ ಪೊಲೀಸರು 1,953 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದರು.