ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇರುವ ‘ಬ್ಯಾಕ್ಲಾಗ್’ ಸೌಲಭ್ಯ ಇನ್ನು ಮುಂದೆ ಇತರೆ ಹಿಂದುಳಿದ ವರ್ಗಗಳಿಗೂ(ಒಬಿಸಿ) ಅನ್ವಯಿಸಲಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರದ ಎಲ್ಲ ಹಂತದ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಾಗ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಟ್ಟ ಹುದ್ದೆಗಳಿಗೆ ಅದೇ ಪ್ರವರ್ಗಗಳ ಅರ್ಹರು ಲಭ್ಯ ಇಲ್ಲದ ಸಂದರ್ಭಗಳಲ್ಲಿ ಅಂತಹ ಹುದ್ದೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಅದರ ನಂತರದ ನೇಮಕಾತಿ ಸಂದರ್ಭದಲ್ಲಿ ಅವುಗಳನ್ನು ಸಂಬಂಧಪಟ್ಟ ಪ್ರವರ್ಗದ ಅಭ್ಯರ್ಥಿಗಳಿಗೇ ಮೀಸಲಿಡಬೇಕು ಎಂಬುದನ್ನು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಬ್ಯಾಕ್ಲಾಗ್: ಇದುವರೆಗೂ ಏನಾಗುತ್ತಿತ್ತು?
ಇದುವರೆಗೂ ಬ್ಯಾಕ್ ಲಾಗ್ ವ್ಯವಸ್ಥೆ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಇತ್ತು. ಹಿಂದುಳಿದ ವರ್ಗದವರಿಗೆ ಮೀಸಲಿಟ್ಟ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯ ಇಲ್ಲದ ಸಂದರ್ಭದಲ್ಲಿ ಅಂತಹ ಹುದ್ದೆಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅವಕಾಶ ಇತ್ತು. ಇನ್ನು ಮುಂದೆ ಅದಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.