ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಕಡತಗಳ ವಿಲೇವಾರಿ ಕುರಿತು ಪರಾಮರ್ಶೆ ನಡೆಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯ ಚಂದ್ರ ಶನಿವಾರ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತಮ ಹಾಗೂ ಪಾರದರ್ಶಕ ಆಡಳಿತ ನೀಡುವುದು ನಮ್ಮ ಗುರಿ. 3–4 ವರ್ಷಗಳಿಂದ ಇತ್ಯರ್ಥ ಆಗದೇ ಇರುವ ಕಡತಗಳನ್ನು ವಿಲೇವಾರಿ ಮಾಡಲು ಸರ್ಕಾರ ಆದ್ಯತೆ ನೀಡಲಿದೆ’ ಎಂದರು.
‘ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಕಡತಗಳ ವಿಲೇವಾರಿಯ ಮೇಲ್ವಿಚಾರಣೆ ನಡೆಸಬೇಕು. ಮುಖ್ಯಮಂತ್ರಿಯವರೂ ಸೇರಿದಂತೆ ಎಲ್ಲ ಸಚಿವರು ವಾರಕ್ಕೆ ಎರಡು ದಿನ ಕಚೇರಿಯಲ್ಲಿ ಕುಳಿತು ಕಡತಗಳ ವಿಲೇವಾರಿ ಮಾಡಲಿದ್ದೇವೆ’ ಎಂದು ಹೇಳಿದರು.
ಸಿದ್ದರಾಮಯ್ಯ ಸೂಚನೆ ಬೆಂಗಳೂರು: ಇತ್ಯರ್ಥವಾಗದೇ ಇರುವ ಕಡತಗಳನ್ನು ವಿಲೇವಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳಿಗೆ ಹೇಳಿದ್ದಾರೆ. ಈ ಕುರಿತು ನಿಯಮಿತವಾಗಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಸರ್ಕಾರದ ವಿವಿಧ ಮಟ್ಟಗಳಲ್ಲಿ ಸುಮಾರು 2 ಲಕ್ಷ ಕಡತಗಳು ವಿಲೇವಾರಿಗೆ ಬಾಕಿ ಇವೆ. |
‘ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಜಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಲು, ನನ್ನ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಈಗಾಗಲೆ ಏಳು ಸಭೆಗಳನ್ನು ನಡೆಸಲಾಗಿದೆ. ಬೇರೆ ಬೇರೆ ಇಲಾಖೆಗಳ ವತಿಯಿಂದ ನಡೆಯುವ ಒಂದೇ ರೀತಿಯ ಯೋಜನೆಗಳನ್ನು ಒಟ್ಟುಗೂಡಿಸುವ ಬಗ್ಗೆ ಯೋಚನೆ ನಡೆದಿದೆ’ ಎಂದರು.
ನದಿ ಜೋಡಣೆ: ದಕ್ಷಿಣ ಭಾರತದ ಪ್ರಮುಖ ನದಿಗಳಾದ ಮಹಾನದಿ, ಗೋದಾವರಿ, ಕೃಷ್ಣಾ ಮತ್ತು ಕಾವೇರಿ ನದಿಗಳನ್ನು ಪರಸ್ಪರ ಸಂಪರ್ಕಿಸುವ ‘ಪರ್ಯಾಯದ್ವೀಪ ನದಿ ಜೋಡಣೆ ಯೋಜನೆ’ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ದಕ್ಷಿಣದ ಎಲ್ಲಾ ರಾಜ್ಯಗಳು ಈ ಬಗ್ಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಬೇಕಿದೆ. ಈಗಾಗಲೇ ಆಂಧ್ರ ಪ್ರದೇಶ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು.
ಮೇಕೆದಾಟು ಅಣೆಕಟ್ಟೆ: ಮೇಕೆದಾಟಿನಲ್ಲಿ ಕಾವೇರಿ ನದಿಗೆ ಅಣೆಕಟ್ಟೆ ಕಟ್ಟಲು ಅವಕಾಶ ಇದೆ. ಎರಡು ಅಣೆಕಟ್ಟೆಗಳ ಮೂಲಕ ಇಲ್ಲಿ 50 ರಿಂದ 70 ಟಿಎಂಸಿ ನೀರನ್ನು ಸಂಗ್ರಹಿಸಿಡ-ಬಹುದು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.