ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ಗಡಿ ನಿಯಂತ್ರಣ ರೇಖೆ ಬಳಿ ಪಾಕಿ-ಸ್ತಾನದ ಸೇನಾ ಪಡೆಗಳು ಸೋಮವಾರ ಭಾರತೀಯ ಸೇನಾ ಶಿಬಿರಗಳ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿವೆ.
ಪಾಕ್ ಪಡೆಗಳ ದಾಳಿಗೆ ಭಾರತೀಯ ಪಡೆಗಳು ಪ್ರತ್ಯುತ್ತರ ನೀಡಿವೆ. ‘ಪಾಕ್ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ದಾಳಿ ನಡೆಸಿದ್ದರಿಂದ ಕೆಲ ಕಾಲದ ವರೆಗೆ ಗುಂಡಿನ ಚಕಮಕಿ ನಡೆಯಿತು’ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಗಿರಿರಾಜ್ ಸಿಂಗ್ ಅರ್ಜಿ ತಿರಸ್ಕೃತ
ಬೊಕಾರೊ, ಜಾರ್ಖಂಡ್ (ಪಿಟಿಐ): ಹತ್ತು ದಿನಗಳ ಹಿಂದೆ ದ್ವೇಷ ಪ್ರಚೋದಿಸುವ ಭಾಷಣ ಮಾಡಿ ಜಾಮೀನುರಹಿತ ವಾರಂಟ್ಗೆ ಒಳಗಾಗಿರುವ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ತಳ್ಳಿ ಹಾಕಿದೆ.
ನವಡಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗ್ ದ್ವೇಷ ಪ್ರಚೋದಿಸುವ ಭಾಷಣ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಪವಿಭಾಗದ ನ್ಯಾಯಾಧೀಶರು ಕಳೆದ 23ರಂದು ಜಾಮೀನುರಹಿತ ವಾರಂಟ್ ಹೊರಡಿಸಿದ್ದರಿಂದ ಸಿಂಗ್ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಹಣ ಮುಟ್ಟುಗೋಲಿಗೆ ಆದೇಶ
ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿ ಸಂಘಟನೆಯ ತಲೆ ಮರೆಸಿಕೊಂಡ ಭಯೋತ್ಪಾದಕ ನಾಸಿರ್ ಸಫಿ ಮಿರ್ಗೆ ಸೇರಿದ್ದು ಎನ್ನಲಾದ ₨ 55 ಲಕ್ಷಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಅಕ್ರಮ ಹಣ ವರ್ಗಾವಣೆ ತಡೆ ವಿಶೇಷ ನ್ಯಾಯಾಲಯವು ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆಯ ಅನ್ವಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ವರ್ಷದ ಆರಂಭದಲ್ಲಿ 55 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದರು.ವಿಶೇಷ ನ್ಯಾಯಾಲಯವು ಇದೇ ಮೊದಲ ಬಾರಿಗೆ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ.
ಎಎಪಿಗೆ ಕಜ್ಮಿ ರಾಜೀನಾಮೆ
ನವದೆಹಲಿ (ಐಎಎನ್ಎಸ್): ಎಎಪಿ ಕೆಲವು ಕಾರ್ಪೊರೇಟ್ ಕಂಪೆನಿಗಳೊಂದಿಗೆ ಕೈಜೋಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಮಕ್ಸೂದ್ ಅಲಿ ಕಜ್ಮಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಮಂಡಳಿ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರ ಮೇಲೆ ಆರೋಪಗಳ ಸುರಿಮಳೆ ಗರೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.