ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಇದಕ್ಕೆ ತಡೆಯೊಡ್ಡಿದ್ದಾರೆ. ಅದೇ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೂ ಕರವೇ ಕಾರ್ಯಕರ್ತರು ತಡೆಯೊಡ್ಡಿದ್ದು ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಂಡಿದೆ.
ಬೆಳಗ್ಗೆ ಬೆಂಗಳೂರಿನ ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮಾರ್ಗದಲ್ಲಿ ಬೆಳಗ್ಗೆ ಮೆಟ್ರೋ ಸಂಚಾರ ಆರಂಭವಾಗಿತ್ತು. ಆದರೆ 7 ಗಂಟೆಯ ವೇಳೆಗೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರೈಲಿಗೆ ತಡೆಯೊಡ್ಡಿದ್ದಾರೆ. ಇತ್ತ, ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಲ್ಲೂ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಬಿಎಂಟಿಸಿಯ ವೊಲ್ವೋ ಬಸ್ ಸಂಚಾರವೂ ಸ್ಥಗಿತಗೊಂಡಿದ್ದು, ಸಿಟಿ ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.