ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಸಿರಿಯ ಕವಲೇದುರ್ಗ

Last Updated 9 ಜುಲೈ 2011, 19:30 IST
ಅಕ್ಷರ ಗಾತ್ರ

ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಹಸಿರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ. ಶಿವಮೊಗ್ಗದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಊರು. ತೀರ್ಥಹಳ್ಳಿ - ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಈ ದುರ್ಗ ಎದುರಾಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರ ತಾಣ.

ಹೆಜ್ಜೆ ಮೇಲೆ ಹೆಜ್ಜೆಯಿಟ್ಟರೂ ಸದ್ದು ಪ್ರತಿಧ್ವನಿಸುವಷ್ಟು ಪ್ರಶಾಂತ ಹಾಗೂ ಮೌನದ ಪರಿಸರ ಇಲ್ಲಿನದು. ಹಸಿರನ್ನು ಕಣ್ತುಂಬಿಕೊಳ್ಳುವುದು ಮಾತ್ರವಲ್ಲ- ಇತಿಹಾಸದ ಅರಿವನ್ನು ಮನದುಂಬಿಕೊಳ್ಳಲು ಇಲ್ಲಿ ಸಾಕಷ್ಟು ಅವಕಾಶವಿದೆ. ಇತಿಹಾಸದ ಕುರುಹುಗಳ ಹಿಂದೆ ನಡೆದರೆ, ಈ ದುರ್ಗವನ್ನು ಹಿಂದೊಮ್ಮೆ ಭುವನಗಿರಿ ದುರ್ಗ, ಕೌಲೇದುರ್ಗ ಎಂದು ಕರೆಯುತ್ತಿದ್ದುದಾಗಿ ತಿಳಿದುಬರುತ್ತದೆ.

ಕವಲೇದುರ್ಗದಲ್ಲಿನ ಆಕರ್ಷಣೆಗಳಲ್ಲಿ ತಿಮ್ಮಣ್ಣನಾಯಕನ ಕೆರೆಯೂ ಒಂದು. ಹದಿನೆಂಟು ಎಕರೆ ವಿಸ್ತೀರ್ಣದ ಈ ಕೆರೆ, ಹಕ್ಕಿಗಳ ಚಿಲಿಪಿಲಿ ಕಲರವದಿಂದ, ಮೀನುಗಳ ಮುಳುಗಾಟದಿಂದ, ಬೆಳ್ಳಕ್ಕಿಯ ಹಿಂಡಿನಿಂದ ಗಮನಸೆಳೆಯುತ್ತದೆ. ಕೆರೆಯ ಮೇಲಿನಿಂದ ತೇಲಿಬರುವ ತಂಗಾಳಿಗೆ ಮೈಯೊಡ್ಡಿ ಜಲಚರಗಳ ದನಿ ಕೇಳಿಸಿಕೊಳ್ಳುವುದು ಹಿತವಾದ ಅನುಭವ.

ಕೆಳದಿ ಅರಸರು ನಿರ್ಮಿಸಿದ ವೀರಶೈವ ಮಠ ಕವಲೇದುರ್ಗದಲ್ಲಿದೆ. ಈ ಅರಸರಿಗೆ ಏಳರ ಮೇಲೆ ವಿಶೇಷ ಮಮಕಾರ ಇದ್ದಿರಬೇಕು. ಆ ಕಾರಣದಿಂದಲೇ, ಏಳು ಸುತ್ತಿನ ಕೋಟೆ, ಏಳು ಕೆರೆಗಳು ಇಲ್ಲಿವೆ. ಇಷ್ಟುಮಾತ್ರವಲ್ಲ, ಅರಸರು ಆರಾಧಿಸುತ್ತಿದ್ದ ನಾಗದೇವರಿಗೆ ಕೂಡ ಏಳು ಹೆಡೆ!

ಮಠದಿಂದ ಸುಮಾರು ಒಂದು ಕಿ.ಮೀ. ಮುಂದೆ ಸಾಗಿದರೆ ಕೋಟೆಯ ಮುಖ್ಯದ್ವಾರ ಎದುರಾಗುತ್ತದೆ. ಮಹಾದ್ವಾರ ಪ್ರವೇಶಿಸಿದಂತೆ ಸುಮಾರು 50-60 ಅಡಿ ಎತ್ತರದ ಗೋಡೆ ನೋಡಬಹುದು. ಗೋಡೆಯ ಮೇಲೆ ಅಂದಿನ ಕಾಲದ ಚಿತ್ರಕಲೆಯನ್ನು ನೋಡಬಹುದು.

ಕಾವಲುಗಾರರು ಉಳಿದುಕೊಳ್ಳಲು ಮಾಡಿದ್ದ ಚೌಕಾಕಾರದ ಕಾವಲುಗಾರ ಕೊಠಡಿ ಹಾಗೂ ಒಳಭಾಗದಲ್ಲಿ ಮುಖ ಮಂಟಪವನ್ನು ಎರಡನೇ ಮಹಾದ್ವಾರ ಹಾಯುವಾಗ ನೋಡಬಹುದು.

ಮಂಟಪದ ಎಡಭಾಗದಲ್ಲಿ `ನಾಗತೀರ್ಥ~ವೆಂಬ ಕೊಳ ಹಾಗೂ ಸುಮಾರು 6 ಅಡಿ ಎತ್ತರದ ಏಳು ಹೆಡೆಯ ಏಕಶಿಲಾ ನಾಗರ ಶಿಲ್ಪವನ್ನು ನೋಡಬಹುದು. ಮೂರನೆ ಮಹಾದ್ವಾರದ ಬಲಭಾಗದಲ್ಲಿ ನಗಾರಿ ಕಟ್ಟೆಯಿದೆ. ಈ ಪರಿಸರದಲ್ಲಿ ಒಂದು ಸುರಂಗ ಮಾರ್ಗವನ್ನೂ ಕಾಣಬಹುದು.

ನಾಲ್ಕನೆಯ ಮಹಾದ್ವಾರ ತಲುಪಲು ಇಳಿಜಾರಿನ ಹಾಸುಗಲ್ಲನ್ನು ದಾಟಬೇಕು. ಅಲ್ಲಿಯೂ ಒಂದು ಮುಖಮಂಟಪವನ್ನು ನೋಡಬಹುದು.

ಕವಲೇದುರ್ಗದಲ್ಲಿ ವಿಶ್ವನಾಥೇಶ್ವರ ದೇವಾಲಯವಿದೆ. ಈ ದೇವಾಲಯದ ಹೊರಭಾಗದಲ್ಲಿ ಅನೇಕ ಕಲಾಕೃತಿಗಳನ್ನು ಕಾಣಬಹುದು. ಕಾಶಿಯಿಂದ ತಂದ ಅಮೃತಶಿಲೆಯ ವಿಶ್ವನಾಥೇಶ್ವರನ ವಿಗ್ರಹವನ್ನು ಇಲ್ಲಿ ಪ್ರತಿಷ್ಠಾಪಿಸಲಾಗಿದೆಯಂತೆ.

ಅರಸರ ಕಾಲದಲ್ಲಿ ತುಪ್ಪ ಹಾಗೂ ಎಣ್ಣೆಯನ್ನು ಶೇಖರಿಸಲು ಉಪಯೋಗಿಸುತ್ತಿದ್ದ ಬಾವಿಯನ್ನು ದುರ್ಗದಲ್ಲಿ ನೋಡಬಹುದು. ಇದಕ್ಕೆ ಎಣ್ಣೆ ಹಾಗೂ ತುಪ್ಪದ ಬಾವಿಯೆಂದೇ ಈಗಲೂ ಕರೆಯುತ್ತಾರೆ. ಶಿಸ್ತಿನ ಶಿವಪ್ಪನಾಯಕನ ಕಾಲದ ಏತನೀರಾವರಿ ಪದ್ಧತಿ ಬಳಕೆಯ ಕುರುಹುಗಳು ಕವಲೇದುರ್ಗದಲ್ಲಿ ಈಗಲೂ ಕಾಣಬಹುದು.

ದಟ್ಟ ಅರಣ್ಯದ ನಡುವೆ ಸುಮಾರು ಅರ್ಧ ಎಕರೆ ಪ್ರದೇಶದಲ್ಲಿರುವ ಅರಮನೆ ಕಲ್ಲು ಕಂಬಗಳ ಆಸರೆ ಹೊಂದಿದೆ. ಅರಮನೆಗೀಗ ಆಕಾಶವೇ ಛಾವಣಿ. ಕಂಬಗಳು ಮತ್ತು ಮಣ್ಣಿನ ಗೋಡೆಗಳು ಮಾತ್ರ ಉಳಿದಿವೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT