ದೊಡ್ಡಬಳ್ಳಾಪುರ: ಬಿಬಿಎಂಪಿ ಕಸ ವಿಲೇವಾರಿಯಲ್ಲಿ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡದೆ ಹಳ್ಳಿಗಳಿಗೆ ಕಸ ತಂದು ಸುರಿಯುವ ಮೂಲಕ ರೈತರನ್ನು ಒಕ್ಕಲೆಬ್ಬಿಸುತ್ತಿದೆ. ಇದರ ವಿರುದ್ಧ ನಡೆಯುವ ಎಲ್ಲ ರೀತಿಯ ಹೋರಾಟಗಳಲ್ಲೂ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ರವಿನಾರಾಯಣರೆಡ್ಡಿ ಹೇಳಿದರು.
ಅವರು ತಾಲ್ಲೂಕಿನ ಸಾಸಲು ಹೋಬಳಿಯ ಆರೂಢಿ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬಿಬಿಎಂಪಿ ಕಸ ಸುರಿಯಲು 476 ಎಕರೆ ಭೂಮಿ ಸ್ವಾಧೀನಕ್ಕೆ ಒಳಪಡುತ್ತಿರುವ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಬಿಬಿಎಂಪಿ ವೈಜ್ಞಾನಿಕ ಕಸ ವಿಲೇವಾರಿಗೆ ಆಸಕ್ತಿ ವಹಿಸುತ್ತಿಲ್ಲ. ಹೇಗಾದರೂ ಮಾಡಿ ಕಸವನ್ನು ಬಿಬಿಎಂಪಿ ವ್ಯಾಪ್ತಿಯಿಂದ ಹೊರ ಸಾಗಿಸಲು ಮಾತ್ರ ಯೋಜನೆ ರೂಪಿಸುತ್ತಿದೆ. ಇದಕ್ಕೆ ಸಾಕ್ಷಿಯಾಗಿ ತಾಲ್ಲೂಕಿನ ಗುಂಡ್ಲಹಳ್ಳಿ ಹಾಗೂ ಬೆಂಗಳೂರು ಸಮೀಪದ ಮಂಡೂರು ಗ್ರಾಮದ ಸಮೀಪದ ಕಸದ ರಾಶಿ ನೋಡಿದರೆ ಅರ್ಥವಾಗುತ್ತದೆ. ಈ ಭಾಗದ ರೈತರು ಈಗಲೆ ಎಚ್ಚೆತ್ತುಕೊಂಡು ಹೋರಾಟ ನಡೆಸದಿದ್ದರೆ ರೈತರು ಗ್ರಾಮಗಳನ್ನು ತೊರೆಯುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಆರೂಢಿ ಗ್ರಾಮದ ಹಿರಿಯ ರೈತ ನರಸಿಯಪ್ಪ, ವಕೀಲರಾದ ಲೋಕೇಶ್ ಮತ್ತಿತರರು ಹಾಜರಿದ್ದರು.