ನವದೆಹಲಿ: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕನ ಮಾನ್ಯತೆ ನೀಡಬೇಕೆಂಬ ಬೇಡಿಕೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಮಂಗಳವಾರ ತಿರಸ್ಕರಿಸಿದ್ದಾರೆ.
‘ಸದನದ ನಿಯಮಗಳು ಹಾಗೂ ಸಂಪ್ರದಾಯಗಳನ್ನು ಪರಿಶೀಲಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕನ ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ನ ಬೇಡಿಕೆಯನ್ನು ತಿರಸ್ಕರಿಸಿರುವ ಸ್ಪೀಕರ್ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಪೀಕರ್ಗೆ ಪತ್ರ ಬರೆದು, ಖರ್ಗೆ ಅವರಿಗೆ ವಿರೋಧ ಪಕ್ಷದ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿದ್ದರು.
ತೀರ್ಮಾನ ನೋಡಿಲ್ಲ–ಖರ್ಗೆ: ‘ನನಗೆ ವಿರೋಧ ಪಕ್ಷದ ನಾಯಕನ ಸ್ಥಾನಮಾನ ನೀಡುವ ಸಂಬಂಧ ಸ್ಪೀಕರ್ ಅಧಿಕೃತವಾಗಿ ಕೈಗೊಂಡಿರುವ ತೀರ್ಮಾನವನ್ನು ಇನ್ನೂ ನೋಡಿಲ್ಲ. ನಾನು ಗುಲ್ಬರ್ಗಾ ಪ್ರವಾಸದಲ್ಲಿದ್ದೇನೆ’ ಎಂದು ಖರ್ಗೆ ‘ಪ್ರಜಾವಾಣಿ’ಗೆ ತಿಳಿಸಿದರು.
ಈ ವಿಷಯದಲ್ಲಿ ಮುಂದಿನ ಹೆಜ್ಜೆ ಕುರಿತು ಹೈಕಮಾಂಡ್ ತೀರ್ಮಾನಿಸಲಿದೆ. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುವೆ ಎಂದು ಖರ್ಗೆ ಸ್ಪಷ್ಟಪಡಿಸಿದರು.