ಬೆಂಗಳೂರು: ಕಾಡುಪ್ರಾಣಿಗಳು ಹಾಗೂ ಮಾನವರ ನಡುವಿನ ಸಂಘರ್ಷ ತಡೆಗೆ ಸಂಬಂಧಿಸಿದಂತೆ ಕಾಡಿನ ಅಂಚಿಗೆ ತಂತಿ ಬೇಲಿ ನಿರ್ಮಿಸುವುದು, ಪ್ರಾಣಿಗಳು ನಾಡಿಗೆ ನುಗ್ಗದಂತೆ ಪಟಾಕಿ ಸಿಡಿಸುವುದು, ಕಾಡಂಚಿನ ಜನವಸತಿ ಪ್ರದೇಶಗಳಲ್ಲಿ ಸಿಬ್ಬಂದಿ ನೇಮಕ ಮಾಡುವುದೂ ಸೇರಿದಂತೆ ಅಗತ್ಯ ರಕ್ಷಣಾ ಕ್ರಮಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೂಕ್ತ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠವು ಮಂಗಳವಾರ ವಿಲೇವಾರಿ ಮಾಡಿತು.
ಈ ಸಂಬಂಧ ಅರ್ಜಿದಾರರು ಸಲ್ಲಿಸುವ ಮನವಿಯನ್ನು ಸಂರಕ್ಷಣಾಧಿಕಾರಿಗಳು ಮೂರು ತಿಂಗಳ ಒಳಗಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠವು ಆದೇಶಿಸಿದೆ.