ಚಾಮರಾಜನಗರ: ‘ಪ್ರತಿಯೊಬ್ಬರು ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಭೃಂಗೇಶ್ ಸಲಹೆ ನೀಡಿದರು.
ನಗರದ ಕರಿನಂಜನಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದಿಂದ ಕಾನೂನು ಸಾಕ್ಷರತಾ ರಥದ ಮೂಲಕ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿದಿನ ಜೀವನದಲ್ಲಿ ನಡೆಯುವ ಘಟನೆಗೆ ಸಂಬಂಧಿಸಿದಂತೆ ಕಾನೂನಿನ ಅರಿವು ಇರಬೇಕು. ವಾಹನ ಚಾಲನೆ ಮಾಡಲು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ಇದನ್ನು ಪಡೆದುಕೊಳ್ಳದೆ ವಾಹನ ಚಲಾಯಿಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು.
ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಮನುಷ್ಯ ಹುಟ್ಟಿದ ತಕ್ಷಣ ಕಾನೂನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಆದರೆ, ಶಿಕ್ಷಣ ಪಡೆದುಕೊಳ್ಳುತ್ತಾ ಕಾನೂನಿನ ಜ್ಞಾನ ಹೊಂದಬೇಕು ಎಂದು ಹೇಳಿದರು.
ಮಹಿಳೆಯರು ಕಾನೂನಿನ ಬಗ್ಗೆ ಅರಿವು ಹೊಂದಬೇಕು. ಆಗ ತಮ್ಮ ಮೇಲೆ ನಡೆಯುವ ದೌರ್ಜನ್ಯ, ಮಾನಸಿಕ ಹಿಂಸೆ ವಿರುದ್ಧ ಜಾಗೃತರಾಗಬಹುದು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಟಿ.ಜೆ. ಸುರೇಶ್ ಮಾತನಾಡಿ, ಪೋಷಕರು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಉತ್ತಮ ಪರಿಸರದಲ್ಲಿ ಅವರನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿ ಮಮತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂರಕ್ಷಣಾ ಅಧಿಕಾರಿ ಎಸ್. ರಶ್ಮಿ, ವಕೀಲ ಪುಟ್ಟಸ್ವಾಮಿ ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷೆ ಶೋಭಾ, ಮುಖ್ಯ ಶಿಕ್ಷಕಿ ವನಜಾಕ್ಷಿ, ಅಂಗನವಾಡಿ ಮೇಲ್ವಿಚಾರಕಿ ಶಿವಲೀಲಾ ಬೆಟಗೇರಿ ಹಾಜರಿದ್ದರು.