ಯಾದಗಿರಿ: ಯುವ ಜನತೆ ಜೀವನದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳುವ ಅವಶ್ಯಕತೆ ಇದೆ ಎಂದು ಶಾಸಕ ಡಾ.ಎ.ಬಿ. ಮಾಲಕರಡ್ಡಿ ಹೇಳಿದರು. ಮಂಗಳವಾರ ನಗರದ ಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪದವಿ ಮಹಾವಿದ್ಯಾಲಯಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ದೆಸೆಯಿಂದಲೆ ಜೀವನದಲ್ಲಿ ಮಾನವೀಯ ಮೌಲ್ಯ ಮತ್ತು ಶಿಸ್ತನ್ನು ಅಳವಡಿಸಿಕೊಂಡಾಗ ಉತ್ತಮ ನಾಗರಿಕರಾಗಲು ಹೊರಹೊಮ್ಮಲು ಸಾಧ್ಯ. ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀಜಿ ಅವರ ಪರಿಕಲ್ಪನೆಯ ಮೇರೆಗೆ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.
ಶಿಕ್ಷಣ ಮನುಷ್ಯನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಅಜ್ಞಾನವನ್ನು ಅಳಿಸಿ, ಸ್ವಾಭಿಮಾನದ ಜೀವನ ಸಾಗಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣ ಪಡೆದುಕೊಳ್ಳಬೇಕು. ಓದಿನ ಜೊತೆಯಲ್ಲಿ ಇಂತಹ ರಚನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಂಡಾಗ ನಮ್ಮಲ್ಲಿನ ಮಾನಸಿಕ ಸ್ಥೆರ್ಯ ಹೆಚ್ಚಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆ ಮತ್ತು ಗುಲ್ಬರ್ಗ ವಿಶ್ವವಿದ್ಯಾಲಯಗಳ ಆಶ್ರಯದಲ್ಲಿ ನಡೆಯುತ್ತಿರುವ ಈ ವಿಶೇಷ ಶಿಬಿರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಸರ್ಕಾರದ ಉದ್ದೇಶಗಳಿಗೆ ಬೆಲೆ ನೀಡಬೇಕು ಎಂದರು.
ಕಾಲೇಜಿನ ಹಳೆಯ ಹಾಗೂ ಹೊಸ ಕಟ್ಟಡಗಳಿಗೆ ಕಂಪೌಂಡ್ ಅಗತ್ಯವಾಗಿದ್ದು, ಶಾಸಕರ ನಿಧಿಯಿಂದ ₹1 ಕೋಟಿ ನೀಡುವಂತೆ ಹಿರಿಯ ಪ್ರಾಧ್ಯಾಪಕ ಡಾ. ಸುಭಾಷಚಂದ್ರ ಕೌಲಗಿ ಮಾಡಿದ ಮನವಿಗೆ ಸ್ಪಂದಿಸಿದ ಶಾಸಕ ಡಾ. ಮಾಲಕರಡ್ಡಿ, ಕಾಲೇಜುಗಳಿಗೆ ಕಂಪೌಂಡ್ ಅವಶ್ಯವಾಗಿದ್ದು, ತಮ್ಮ ನಿಧಿಯಿಂದ ₨ 50 ಲಕ್ಷ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಶಂಕರ ಎ.ಬಿ. ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತಿನ ಬಗ್ಗೆ ಮತ್ತು ಸಮಾಜ ಸೇವೆಯ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿ.ಪಂ. ಮಾಜಿ ಸದಸ್ಯೆ ನಾಗರತ್ನ ಕುಪ್ಪಿ, ಮೌಲಾಲಿ ಅನಪುರ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ಗೂಳಿ, ಅಂಬಯ್ಯ ಶಾಬಾದಿ, ಬೀರನೂರ, ಮೋನಯ್ಯ ಕಲಾಲ್, ಡಾ.ಜಗನ್ನಾಥ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.