ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಶನಿವಾರ ಪ್ರತಿಭಟನಾನಿರತರ ಮೇಲೆ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಒಬ್ಬ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಯುವಕರಿಬ್ಬರು ಮೃತಪಟ್ಟ ಘಟನೆಯನ್ನು ಖಂಡಿಸಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನಾನಿರತರು ಕಲ್ಲು ತೂರಾಟ ನಡೆಸಿದ ಬಳಿಕ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆಯಿತು. ಉದ್ರಿಕ್ತರನ್ನು ನಿಯಂತ್ರಿಸಲು ಸಿಆರ್ಪಿಎಫ್ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಮೂವರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಮೂವರನ್ನೂ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಸುಹೈಲ್ ಅಹ್ಮದ್ ಸೊಫಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.