ನವದೆಹಲಿ (ಪಿಟಿಐ): ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿ ಹೊರವಲಯದ ನರೆಲಾದಲ್ಲಿ ಬುಧವಾರ ನಡೆದಿದೆ.
ಪಕ್ಷದ ಕಾರ್ಯಕರ್ತರೊಬ್ಬರು ಕಿರುಕುಳ ನೀಡಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಎಎಪಿ ಕಾರ್ಯಕರ್ತೆ ವಿಷ ಸೇವಿಸಿದ್ದಳು. ಅಸ್ವಸ್ಥಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಅನುಚಿತವಾಗಿ ವರ್ತಿಸಿ, ಕಿರುಕುಳ ನೀಡಿದ ಕಾರಣಕ್ಕೆ ತಮ್ಮದೇ ಪಕ್ಷದ ಕಾರ್ಯಕರ್ತ ರಮೇಶ್ ವಾದ್ವಾ ಎಂಬುವವರ ವಿರುದ್ಧ ನನ್ನ ಪತ್ನಿ ಕಳೆದ ಜೂನ್ನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ್ವಾನನ್ನು ಬಂಧಿಸಲಾಗಿತ್ತು. ವಾದ್ವಾ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಕೆಲವು ಸಹಚರರೊಂದಿಗೆ ಸೇರಿ ಮಾನಸಿಕ ಹಿಂಸೆ ನೀಡುತ್ತಿದ್ದ. ಇದರಿಂದ ನೊಂದಿದ್ದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಆರೋಪಿಯನ್ನು ಶಾಸಕರೊಬ್ಬರು ರಕ್ಷಿಸುತ್ತಿದ್ದಾರೆ ಎಂದು ಕಾರ್ಯಕರ್ತೆಯ ಪತಿ ಆರೋಪಿಸಿದ್ದಾರೆ.
ಕಿರುಕುಳದ ಬಗ್ಗೆ ಮಹಿಳೆ ನೀಡಿದ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಶಾಸಕ ಶರದ್ ಚೌಹಾಣ್ ಈ ಸಾವಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಮಹಿಳಾ ಕಾರ್ಯಕರ್ತೆ ಸಾವಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಎಎಪಿ ದೂರಿದೆ. ಪ್ರಕರಣದ ನ್ಯಾಯಾಂಗ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.