ಬೆಂಗಳೂರು: ಹೊಸ ರೈಲು ಮಾರ್ಗ ಯೋಜನೆಗಳಿಗೆ ಅಗತ್ಯವಿರುವ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಯ ಅಡಿಯಲ್ಲಿ ಮಾರುಕಟ್ಟೆ ದರದ ನಾಲ್ಕು ಪಟ್ಟು ಹೆಚ್ಚಿಗೆ ಹಣ ಕೊಟ್ಟು ಸ್ವಾಧೀನಪಡಿಸುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.
ರಾಜ್ಯದ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ಬಗ್ಗೆ ನೈರುತ್ಯ ರೈಲ್ವೆ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಸಿದ್ದರಾಮಯ್ಯ, ಗದಗ–ವಾಡಿ ಮತ್ತು ಕೆಂಗೇರಿ–ಕನಕಪುರ– ಚಾಮರಾಜನಗರ ನಡುವಣ ರೈಲು ಮಾರ್ಗದ ಯೋಜನೆಗಳಿಗೆ ಭೂಸ್ವಾಧೀನ ಪಡಿಸಿಕೊಳ್ಳಲು ಕೆಐಎಡಿಬಿ ಕಾಯ್ದೆಯ ಅಡಿಯಲ್ಲಿ ಸಾಧ್ಯವಿದೆಯೇ ಎಂಬುದನ್ನು ಅಧ್ಯಯನ ಮಾಡುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಎರಡು ಯೋಜನೆಗಳಿಗೆ ಕೇಂದ್ರ ಸರ್ಕಾರ 2013ರಲ್ಲಿ ಅನುಮೋದನೆ ನೀಡಿತ್ತು. ಆದರೆ, ಯೋಜನೆಗೆ ಅಗತ್ಯವಾದ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಇದುವರೆಗೆ ಸಾಧ್ಯವಾಗದೇ ಇರುವುದರಿಂದ ಯೋಜನೆ ಇನ್ನೂ ಆರಂಭವಾಗಿಲ್ಲ. 2013ರ ಭೂಸ್ವಾಧೀನ ಕಾಯ್ದೆ (ಭೂಸ್ವಾಧೀನ, ಪರಿಹಾರ, ಪುನರ್ವಸತಿ) ಅಥವಾ 2015ರ ಹೊಸ ಸುಗ್ರೀವಾಜ್ಞೆ ಅಡಿಯಲ್ಲಿ ಭೂಸ್ವಾಧೀನ ಪಡಿಸುವ ಬಗ್ಗೆ ರಾಜ್ಯ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ.
ಈ ಯೋಜನೆಗಳಿಗೆ ಉಚಿತವಾಗಿ ಜಮೀನು ನೀಡಲು ಮತ್ತು ಯೋಜನಾ ವೆಚ್ಚದಲ್ಲಿ ಅರ್ಧದಷ್ಟನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿತ್ತು.
2013ರ ಕಾಯ್ದೆಯ ಅಡಿಯಲ್ಲಿ ಜಮೀನು ಸ್ವಾಧೀನ ಮಾಡುವುದಕ್ಕೂ ಮುನ್ನ ಸಾಮಾಜಿಕ ಮತ್ತು ಪರಿಸರದ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗೆ ಮತ್ತು ಜಮೀನು ಕಳೆದು ಕೊಳ್ಳುವವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ಬಗ್ಗೆ ಅಧ್ಯಯನ ನಡೆಸಬೇಕಾಗುತ್ತದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು ಎಂದು ಗೊತ್ತಾಗಿದೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್. ರೋಷನ್ ಬೇಗ್, ಭೂಸ್ವಾಧೀನ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಸಿದ್ದರಾಮಯ್ಯ ಅವರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ರೈಲ್ವೆ ಇಲಾಖೆಯೇ ಸಂಪೂರ್ಣ ವೆಚ್ಚ ಭರಿಸಲಿರುವ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಭೂಸ್ವಾಧೀನ ಸಮಸ್ಯೆಯಿಂದ ನನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಇನ್ನೂ ಸಮ್ಮತಿಸಿಲ್ಲ. ಮಾರಿಕುಪ್ಪಂ–ಕುಪ್ಪಂ ಮತ್ತು ಯಲಹಂಕ–ಚನ್ನಸಂದ್ರ ಯೋಜನೆಗಳೂ ಕೂಡ ಭೂಸ್ವಾಧೀನದ ಕಾರಣಕ್ಕೆ ವಿಳಂಬವಾಗಿದೆ ಎಂದರು.
ಈ ಯೋಜನೆಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದರು.
₨ 25 ಕೋಟಿ ಬಿಡುಗಡೆಗೆ ಸಮ್ಮತಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿ ಯಲ್ಲಿ ಪ್ರಗತಿಯಲ್ಲಿರುವ ಆರು ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿ ಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ₨26 ಕೋಟಿ ಬಿಡು ಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಶೀಘ್ರದಲ್ಲಿ ಬೆಂಗಳೂರನ್ನು ರೈಲ್ವೆ ಲೆವೆಲ್ ಕ್ರಾಸಿಂಗ್ ಮುಕ್ತ ನಗರವನ್ನಾಗಿ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ನಗರದಲ್ಲಿ ಕೈಗೆತ್ತಿಕೊಳ್ಳಲಾಗಿ ರುವ ರೈಲ್ವೆ ಯೋಜನಗಳ ಪ್ರಗತಿ ಕುರಿತಾಗಿ ನೈರುತ್ಯ ರೈಲ್ವೆ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಈ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಭಾಗವಹಿಸಿದ್ದ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಆರ್. ರೋಷನ್ ಬೇಗ್ ಅವರು ಸಭೆಯ ವಿವರಗಳನ್ನು ನೀಡಿದರು. ‘ಬಿಬಿಎಂಪಿ ವ್ಯಾಪ್ತಿ ಅನುಷ್ಠಾನ ಗೊಳ್ಳುತ್ತಿರುವ ಯೋಜನೆಗಳಲ್ಲಿ ಕೆಲವು ವಿಳಂಬವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.