ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಮುಂದಿನ 1 ತಿಂಗಳ ಕಾಲ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತಿಲ್ಲ ಎಂದು ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ, ಈ ಆದೇಶ ನೀಡಿತು.
ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಅವರು, ‘ಸರ್ಕಾರಕ್ಕೆ ಸುಮಾರು 800 ಹುದ್ದೆಗಳನ್ನು ತುಂಬುವ ಜರೂರತ್ತಿದೆ. ಆದ್ದರಿಂದ ನೇಮಕಕ್ಕೆ ಅವಕಾಶ ಕೊಡಬೇಕು. ಒಂದು ವೇಳೆ ತನಿಖೆ ನಡೆದು ಪಟ್ಟಿಯಲ್ಲಿರುವ ವ್ಯಕ್ತಿಗಳು ಅಪರಾಧಿ ಎಂದು ಕಂಡುಬಂದರೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಸ್ಪಷ್ಟನೆ ನೀಡಿದರು. ಆದರೆ, ಕೋರ್ಟ್ ಈ ವಾದವನ್ನು ತಳ್ಳಿಹಾಕಿತು.
ಕೆಪಿಎಸ್ಸಿಗೆ ನೇಮಕ ಮಾಡಲು ಸರ್ಕಾರ ಕಳಿಸಿದ ಪಟ್ಟಿಯಲ್ಲಿ ಇರುವ ವ್ಯಕ್ತಿಗಳು ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅನರ್ಹರು. ಆದ್ದರಿಂದ ನೇಮಕಕ್ಕೆ ಅವಕಾಶ ನೀಡಬಾರದು ಎಂದು ಟಿ.ಜೆ ಅಬ್ರಹಾಂ ಕೋರ್ಟ್ ಮೊರೆ ಹೋಗಿದ್ದರು.