ಡೆಹ್ರಾಡೂನ್ (ಪಿಟಿಐ): ಕೇದಾರನಾಥ ದೇವಾಲಯವನ್ನು ಪುನರ್ ನಿರ್ಮಾಣ ಮಾಡುವುದಾಗಿ ಶನಿವಾರ ಉತ್ತರಾಖಂಡದ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ.ಕೇದಾರನಾಥ ಮತ್ತು ಸುತ್ತ ಮುತ್ತಲಿನ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಷ್ಕರಿಸಿ ಪುನರ್ ನಿರ್ಮಾಣ ಮಾಡಲಾಗುವುದು. ದೇವಾಲಯ ಸೇರಿದಂತೆ ದೇವಾಲಯದ ಸುತ್ತಮುತ್ತಲಿನ ರಕ್ಷಣಾ ಗೋಡೆಯನ್ನೂ ಪುನರ್ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಉತ್ತರಾಖಂಡ ಮತ್ತು ಹಿಮಾಲಯದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹರೀಶ್, ಎರಡು ಹಂತಗಳಲ್ಲಿ ಪುನರ್ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು.
ನೈಸರ್ಗಿಕ ವಿಕೋಪದಿಂದ ದೇವಾಲಯವನ್ನು ರಕ್ಷಿಸಲು ದೇವಾಲಯದ ಸುತ್ತ ರಕ್ಷಣಾ ಗೋಡೆಗಳನ್ನು ನಿರ್ಮಿಸಲಾಗುವುದು. ಮುಂದಿನ 45 ದಿನಗಳಲ್ಲಿ ಈ ಕಾರ್ಯ ಆರಂಭವಾಗಲಿದೆ ಎಂದು ಅವರು ತಿಳಿಸಿದರು.
ಮಂದಾಕಿನಿ ಮತ್ತು ಸರಸ್ವತಿ ನದಿಗಳ ಪುನಶ್ಚೇತನ ಮತ್ತು ಲಿನ್ಚೌಲಿ ಪಟ್ಟಣವನ್ನು ಪುನರ್ ನಿರ್ಮಾಣ ಮಾಡಲಾಗುವುದು. ಲೋಕೋಪಯೋಗಿ ಇಲಾಖೆಗೆ ಈಗಾಗಲೇ ನದಿಗಳ ಪುನಶ್ಚೇತನ ಕಾರ್ಯ ವಹಿಸಲಾಗಿದೆ. ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಚಾರ್ಧಾಮ್ ಸೇರಿದಂತೆ ಇತರ ಪ್ರದೇಶಗಳಲ್ಲಿ ವರ್ಷಪೂರ್ತಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವತ್ತ ಗಮನ ಹರಿಸಲಾಗುವುದು ಎಂದರು.