ಬೆಂಗಳೂರು: ನೃಪತುಂಗ ರಸ್ತೆಯಲ್ಲಿರುವ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಬಹುಮಹಡಿ ಕಾರು ನಿಲ್ದಾಣ ಹಾಗೂ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ.
ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಪರವಾಗಿ ಕಾರ್ಯದರ್ಶಿ ಪುಟ್ಟೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠವು ಗುರುವಾರ ವಿಲೇವಾರಿ ಮಾಡಿತು.
‘ಕೋರ್ಟ್ ಕಟ್ಟಡಕ್ಕೆ ಹೊಂದಿಕೊಂಡ ಕಬ್ಬನ್ ಪಾರ್ಕ್ನ ಹಸಿರು ಪ್ರದೇಶಕ್ಕೆ ಯಾವುದೇ ಧಕ್ಕೆಯಾಗದಂತೆ ಆದಷ್ಟು ಶೀಘ್ರ ಹೊಸ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಬೇಕು’ ಎಂದು ನ್ಯಾಯಪೀಠವು ಅರ್ಜಿದಾರರಿಗೆ ಸೂಚಿಸಿತು.
‘ಕಾರು ನಿಲ್ದಾಣ ಮತ್ತು ಕಟ್ಟಡ ನಿರ್ಮಾಣಕ್ಕಾಗಿ ತೋಟಗಾರಿಕಾ ಇಲಾಖೆ ಹಾಗೂ ಸಾರ್ವಜನಿಕ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಹೈಕೋರ್ಟ್ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿತ್ತು.