ವಾಷಿಂಗ್ಟನ್ (ಪಿಟಿಐ): ದೇಶದಲ್ಲಿ ಖಾಸಗಿ ಹೂಡಿಕೆಗೆ ಇರುವ ತೊಡಕುಗಳನ್ನು ನಿವಾರಿಸಿದಲ್ಲಿ ಉತ್ತಮ ಆರ್ಥಿಕ ಪ್ರಗತಿ ದರ ಸಾಧ್ಯ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣಿಯನ್ ಅಭಿಪ್ರಾಯಪಟ್ಟಿದ್ದಾರೆ.
ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಭೆಯಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಮತ್ತು ವಿದ್ಯುತ್ ಕೊರತೆ ಹಾಗೂ ಹಲವು ನಿಯಮಗಳನ್ನು ಅನುಸರಿಸಬೇಕಿರುವುದರಿಂದ ಖಾಸಗಿ ಹೂಡಿಕೆಗೆ ಅಡ್ಡಿಯಾಗಿದೆ. ಉತ್ತಮ ಆಡಳಿತ, ಆಸ್ತಿ ಹಕ್ಕು ರಕ್ಷಣೆ, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ದೇಶದ ಆರ್ಥಿಕತೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ನಡೆಯಬೇಕಿದೆ ಎಂದಿದ್ದಾರೆ.
ದೇಶದಲ್ಲಿ ಖಾಸಗಿ ಹೂಡಿಕೆಗೆ ಬಹಳಷ್ಟು ನಿಯಮಗಳನ್ನು ಅನುಸರಿಸಬೇಕು. ಇದರಿಂದ ಉದ್ಯೋಗ ಸೃಷ್ಟಿ, ಖಾಸಗಿ ಕ್ಷೇತ್ರದ ವೃದ್ಧಿಗೆ ಹಿನ್ನಡೆಯಾಗಿದೆ. ಈ ಸಮಸ್ಯೆಗಳನ್ನು ನಿವಾರಿಸುವುದು ದೇಶದ ಮುಂದಿರುವ ಬಹು ದೊಡ್ಡ ಸವಾಲಾಗಿವೆ ಎಂದು ಅವರು ತಿಳಿಸಿದ್ದಾರೆ.ಕಲ್ಲಿದ್ದಲು ಮತ್ತು ವಿದ್ಯುತ್ ಕೊರತೆಯಿಂದಾಗಿ ಹಲವು ಯೋಜನೆಗಳು ಸ್ಥಗಿತವಾಗಿವೆ. ಈ ಸಮಸ್ಯೆಗಳನ್ನು ಬಗೆಹರಿಸಿದಲ್ಲಿ ಖಾಸಗಿ ಹೂಡಿಕೆಗೆ ಮತ್ತು ಅಭಿವೃದ್ಧಿಗೆ ನೆರವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ದೇಶದ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗಾಗಿ ಜಿಡಿಪಿ ದರ ಶೇ 5ರಷ್ಟಿದ್ದರೆ ಸಾಲದು. ಶೇ 7.5 ರಿಂದ ಶೇ 8ರಷ್ಟಿರಬೇಕಾಗುತ್ತದೆ ಎಂದು ಹೇಳಿದ್ದಾರೆ.