ಚಾಮರಾಜನಗರ: ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳು ಗುಣಮಟ್ಟದ ಮನೆ ಹಾಗೂ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಗೋವಿಂದರಾಜು ಸಲಹೆ ನೀಡಿದರು.
ತಾಲ್ಲೂಕಿನ ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಸಭೆಯಲ್ಲಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿದರು.
ಗುಡಿಸಲು ವಾಸಿಗಳಿಗೆ ಮನೆ ನೀಡುವ ಜೊತೆಗೆ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಪ್ರಥಮ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯಲು 90 ಮಾನವ ದಿನಗಳ ಕೂಲಿ ಅನ್ವಯ ₹ 20,360 ನೀಡಲಾಗುತ್ತದೆ.
ಪ್ರತಿ ಮನೆಗೆ ಅಂಬೇಡ್ಕರ್ ಆಶ್ರಯ ಯೋಜನೆಯಡಿ ₹ 1.50 ಲಕ್ಷ ಅನುದಾನ ಲಭ್ಯವಾಗಲಿದೆ. ಈ ಹಣ ಪಡೆದು ಗುಣಮಟ್ಟದ ಮನೆ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿಯು ಪಂಚಾಯಿತಿ ಕಾಮಗಾರಿಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದೆ. ಪಂಚಾಯಿತಿಗೆ ಒಳಪಡುವ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇಲ್ಲ. ನೈರ್ಮಲ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಸಿದ್ದಾಚಾರಿ, ತಾಲ್ಲೂಕು ಸಂಯೋಜಕ ಆರ್.ಮಹೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚನ್ನನಂಜಪ್ಪ, ಸದಸ್ಯರಾದ ಚಿಕ್ಕಹೊಳೆ ಮೂರ್ತಿ, ನಂಜುಂಡಸ್ವಾಮಿ, ಶಿವಪ್ರಸಾದ್, ಬಸವರಾಜು, ಗೌರಮ್ಮ, ಮಧುಮಾಲಾ, ಪಿಡಿಒ ಶಿವಪ್ರಸಾದ್, ಲೆಕ್ಕಾಧಿಕಾರಿ ನಾಗನಾಯಕ ಇದ್ದರು.