ಬೆಂಗಳೂರು: ಆವಲಹಳ್ಳಿ ಸಮೀಪದ ಮಂಡೂರು ಗ್ರಾಮದಲ್ಲಿ ಗುರುವಾರ ರಾತ್ರಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ನಂದಕುಮಾರ್ ಎಂಬಾತ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಮಂಡೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮರಿಯಪ್ಪ ಅವರ ಪತ್ನಿ ಐಮಾವತಿ, ಸೀನಪ್ಪ ಹಾಗೂ ನಾಗರಾಜಪ್ಪ ಗಾಯಗೊಂಡಿದ್ದಾರೆ.
ಎರಡೂ ಪಕ್ಷಗಳ ಕಾರ್ಯಕರ್ತರು ರಾತ್ರಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆಗ ಪರಸ್ಪರ ಎದುರಾದ ಇಬ್ಬರ ನಡುವೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು.
ಈ ವೇಳೆ ಬಿಜೆಪಿ ಕಾರ್ಯಕರ್ತ ಎನ್ನಲಾದ ಅದೇ ಗ್ರಾಮದ ನಂದಕುಮಾರ್ ಎಂಬಾತ ಮೂವರ ಮೇಲೆ ಮಚ್ಚನಿಂದ ಹಲ್ಲೆ ನಡೆಸಿ ಪರಾರಿಯಾದ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆವಲಹಳ್ಳಿ ಪೊಲೀಸರು ಮಾಹಿತಿ ನೀಡಿದ್ದಾರೆ.