ಭುವನೇಶ್ವರ (ಐಎಎನ್ಎಸ್): ಒಡಿಶಾದ ಕೇಂದ್ರಪಾದ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಚುನಾವಣೋತ್ತರ ಹಿಂಸಾಚಾರ ಭುಗಿಲೆದ್ದಿದ್ದು, ಬಿಜು ಜನತಾದಳದ (ಬಿಜೆಡಿ) ಬೆಂಬಲಿಗರೊಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತಿನ್ ಭಾನು ದಾಸ್ ಜಾವಳೆ ಹೇಳಿದ್ದಾರೆ.
ಮುಂದಿನ 24 ಗಂಟೆಗಳ ಕಾಲ ಅಥವಾ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಔಲು ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಬಿಜೆಡಿ ಹಾಗೂ ಕಾಂಗ್ರೆಸ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ನಾರಾಯಣ್ ಬೆಹೆರಾ ತಿಳಿಸಿದ್ದಾರೆ.