ಬೆಂಗಳೂರು: ‘ರಾಜ್ಯದಲ್ಲಿ ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳು ದೊರೆಯಲು ಜನೌಷಧ ಮಳಿಗೆಗಳನ್ನು ತೆರೆಯುವಂತೆ ಸರ್ಕಾರಕ್ಕೆ ಸೂಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಸೋಮವಾರ ಎನ್ಆರ್ ಕಾಲೋನಿಯಲ್ಲಿ ವಿವಿಧೋದ್ದೇಶ ಕಟ್ಟಡ, ಹೆರಿಗೆ ಆಸ್ಪತ್ರೆಯ ಡಯಾಲಿಸಿಸ್ ಘಟಕ ಹಾಗೂ ಲ್ಯಾಬೊರೇಟರಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೂ ಒಂದು ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ.
‘ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಔಷಧಗಳು ದೊರೆಯಬೇಕೆಂಬ ಉದ್ದೇಶದಿಂದ ಜನೌಷಧಿ ಮಳಿಗೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರೆಯುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿತ್ತು. ಈ ವಿಷಯವನ್ನು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಗಮನಕ್ಕೆ ತಂದರೂ ಅವರಿಂದ ಇನ್ನೂ ಉತ್ತರ ಬಂದಿಲ್ಲ. ಮಧ್ಯಪ್ರದೇಶ, ಛತ್ತೀಸಗಡ, ರಾಜಸ್ತಾನ ಸೇರಿದಂತೆ ದೇಶದ 7 ರಾಜ್ಯಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆಗಳನ್ನು ತೆರೆದಿವೆ’ ಎಂದು ಮಾಹಿತಿ ನೀಡಿದರು.